ಹುಬ್ಬಳ್ಳಿ: ’ಶಕ್ತಿ‘ ಯೋಜನೆ ಅನುಷ್ಠಾನದ ಮೊದಲ ತಿಂಗಳು ಗರಿಷ್ಠ ದಿನಗಳ ಕರ್ತವ್ಯ ನಿರ್ವಹಿಸಿದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ನಗದು ಬಹುಮಾನ, ಪ್ರಶಂಸನಾ ಪತ್ರ ನೀಡಿದ್ದಾರೆ.
’ಶಕ್ತಿ ಯೋಜನೆಗೆ ನಿರೀಕ್ಷೆಗೂ ಮೀರಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಸಾರಿಗೆ ಸಿಬ್ಬಂದಿಯ ಕಾರ್ಯಕ್ಷಮತೆ ಶ್ಲಾಘನೀಯವಾಗಿದೆ. ಚಾಲನಾ ಸಿಬ್ಬಂದಿಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಜೂನ್ 11ರಿಂದ ಜುಲೈ 10ರವರೆಗಿನ ಅವಧಿಯಲ್ಲಿ ಗರಿಷ್ಠ ದಿನ ಕರ್ತವ್ಯ ನಿರ್ವಹಿಸಿದ ಪ್ರತಿ ಘಟಕದ ಐವರು ಚಾಲಕರು ಹಾಗೂ ಐವರು ನಿರ್ವಾಹಕರಿಗೆ ನಗದು ಬಹುಮಾನ ನೀಡಲಾಗಿದೆ’ ಎಂದು ಭರತ್ ತಿಳಿಸಿದ್ದಾರೆ.
’ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಹಾವೇರಿ ಹಾಗೂ ಉತ್ತರ ಕನ್ನಡ ಆರು ಜಿಲ್ಲೆಗಳ 9 ಸಾರಿಗೆ ವಿಭಾಗಗಳ 275 ಚಾಲಕರು ಹಾಗೂ 275 ನಿರ್ವಾಹಕರು ಸೇರಿದಂತೆ ಒಟ್ಟು 550 ಚಾಲನಾ ಸಿಬ್ಬಂದಿಗೆ ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರ ನೀಡಲಾಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.