ಹುಬ್ಬಳ್ಳಿ: ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಹಾಮಂಡಳ ಸೋಮವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿತು.
ನಗರದ ಗೋಕುಲ್ ರಸ್ತೆಯ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಯಿಂದ ಮಹಾಮಂಡಳದ ರಾಜ್ಯ ಘಟಕದ ಅಧ್ಯಕ್ಷ ಕೆ.ಎಸ್. ಶರ್ಮಾ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿದ ಪ್ರತಿಭಟನಾಕಾರರು, ಸರ್ಕಾರದ ಮತ್ತು ಆಡಳಿತ ವ್ಯವಸ್ಥೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ವಿಚಾರಣೆ ಎದುರಿಸುತ್ತಿರುವ, ಗೈರು ಹಾಜರಿ ಕಾರಣ ಕೊಟ್ಟು ಬೇರೆ ವಿಭಾಗಗಳಿಗೆ ವರ್ಗಾವಣೆ ಮಾಡಿರುವವರ ಆದೇಶಗಳನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದರು. ಸಮವಸ್ತ್ರಗಳನ್ನು ಕೊಡಬೇಕು. ಬಾಕಿ ವೇತನ ಪಾವತಿಸಬೇಕು. ನಿವೃತ್ತಿ ನೌಕರರಿಗೆ ಉಪಧನ, ರಜೆ ನಗದೀಕರಣ ನೀಡಬೇಕು, ಘಟಕ ಮಟ್ಟದಲ್ಲಿ ಕಾನೂನು ಬಾಹಿರ ದಂಡ ವಿಧಿಸುವುದನ್ನು ನಿಲ್ಲಿಸಬೇಕು ಎನ್ನುವುದು ಸೇರಿದಂತೆ ಒಟ್ಟು 24 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.