ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಜಿ ಹಾಕಿದ ಪ್ರತಿಯೊಬ್ಬರಿಗೂ ಹಾಸ್ಟೆಲ್ ಕೊಡಿ

ಎಐಡಿಎಸ್‌ಓ ಹಾಗೂ ದಲಿತ ಮಹಿಳಾ ಒಕ್ಕೂಟದ ಆಗ್ರಹ
Last Updated 24 ಜುಲೈ 2019, 13:50 IST
ಅಕ್ಷರ ಗಾತ್ರ

ಧಾರವಾಡ: ಸರ್ಕಾರಿ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಹಾಕಿದ ಪ್ರತಿಯೊಬ್ಬ ವಿದ್ಯಾರ್ಥಿಗೂ ಸೌಲಭ್ಯ ಒದಗಿಸಬೇಕು. ಜತೆಗೆ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಎಐಡಿಎಸ್‌ಒ ಮತ್ತು ದಲಿತ ಮಹಿಳಾ ಒಕ್ಕೂಟ ಜಂಟಿಯಾಗಿ ಮಂಗಳವಾರ ಪ್ರತಿಭಟನೆ ನಡೆಸಿದವು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಒಕ್ಕೂಟದ ರಾಜ್ಯ ಸಂಚಾಲಕಿ ಗೌರಮ್ಮ ಕರೆಪ್ಪನವರ, ‘ಶಿಕ್ಷಣಕ್ಕೆ ಹೆಸರಾದ ಧಾರವಾಡಕ್ಕೆ ಬೇರೆ ಊರುಗಳಿಂದ ವಿದ್ಯಾರ್ಥಿಗಳು ಬರುತ್ತಾರೆ. ಹೀಗೆ ಬರುವ ಬಹುತೇಕರು ಆರ್ಥಿಕವಾಗಿ ಹಿಂದುಳಿದವರಾಗಿದ್ದು, ಸರ್ಕಾರಿ ವಿದ್ಯಾರ್ಥಿ ನಿಲಯಗಳನ್ನೇ ಅವಲಂಬಿಸಿದ್ದಾರೆ. ಆದರೆ ಅದು ಸಾಧ್ಯವಾಗುತ್ತಿಲ್ಲ. ಹೀಗಾಗಿ ದುಡಿದು ಬಾಡಿಗೆ ರೂಮಿನಲ್ಲಿದ್ದು ಓದುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೆಲವರಿಗೆ ವಿದ್ಯಾರ್ಥಿ ನಿಲಯ ಸಿಗದೆ ಊರಿಗೆ ಮರಳುತ್ತಿದ್ದಾರೆ. ಹೀಗಾಗಿ ಅರ್ಜಿ ಹಾಕಿದ ಪ್ರತಿಯೊಬ್ಬರಿಗೂ ವಿದ್ಯಾರ್ಥಿ ನಿಲಯದಲ್ಲಿ ಅವಕಾಶ ನೀಡಬೇಕು’ ಎಂದು ಒತ್ತಾಯಿಸಿದರು.

ಎಐಡಿಎಸ್‌ಒ ಜಿಲ್ಲಾ ಜಂಟಿ ಕಾರ್ಯದರ್ಶಿ ಮಹಾಂತೇಶ ಬಿಳೂರ ಮಾತನಾಡಿ, ‘ಈ ದೇಶದಲ್ಲಿ ಯಾವುದೇ ಪ್ರದೇಶದಲ್ಲಿ ವಿದ್ಯಾರ್ಥಿ ಕಲಿಯಬಯಸಿದರೂ ಅವರಿಗೆ ಮೂಲಸೌಕರ್ಯ ಒದಗಿಸಿಕೊಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಎಲ್ಲಾ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ನಿಲಯ ಸಿಗದಿರುವುದು ಒಂದೆಡೆಯಾದರೆ, ಇರುವ ವಿದ್ಯಾರ್ಥಿ ನಿಲಯದಲ್ಲಿ ಮೂಲಸೌಕರ್ಯಗಳ ಕೊರತೆ ಇರುವುದು ಮತ್ತೊಂದು ರೀತಿಯ ಸಮಸ್ಯೆಯಾಗಿದೆ. ಈ ಸಮಸ್ಯೆಗಳನ್ನು ಸರ್ಕಾರ ಕೂಡಲೇ ಪರಿಹರಿಸಬೇಕು’ ಎಂದು ಒತ್ತಾಯಿಸಿದರು.

‘ಶಾಲಾ ಕಾಲೇಜು ಆರಂಭವಾದ ದಿನದಿಂದಲೇ ವಿದ್ಯಾರ್ಥಿನಿಲಯ ಸೌಲಭ್ಯ ಒದಗಿಸಬೇಕು. ಅಲ್ಲಿ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು, ಸ್ವಂತ ಕಟ್ಟಡದಂಥ ಮೂಲಸೌಕರ್ಯ ಒದಗಿಸಬೇಕು. ವಿದ್ಯಾರ್ಥಿ ವೇತನವನ್ನು ಆಯಾ ಶೈಕ್ಷಣಿಕ ವರ್ಷವೇ ಬಿಡುಗಡೆ ಮಾಡಬೇಕು’ ಎಂಬ ಬೇಡಿಕೆಗಳನ್ನು ಸಲ್ಲಿಸಿದರು.

ಸಿಂಧೂ ಕೌದಿ, ರಣಜೀತ್ ಧೂಪದ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT