ಹುಬ್ಬಳ್ಳಿ: ಕಳೆದ ಐದು ವರ್ಷಗಳಿಂದ ಕಾಮಗಾರಿ ಪೂರ್ಣಗೊಳಿಸದೆ ವಿಳಂಬ ಮಾಡುತ್ತಿರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಇಲ್ಲಿನ ಹಳೆ ಹುಬ್ಬಳ್ಳಿಯ ಪಡದಯ್ಯನ ಹಕ್ಕಲಿನನ್ಯೂ ಇಂಗ್ಲಿಷ್ ಶಾಲೆ ಬಳಿ 2016ರಲ್ಲಿ ₹9 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾದ ಡಾ.ಬಾಬು ಜಗಜೀವನರಾಂ ಭವನ ನಿರ್ಮಾಣ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದರು.
‘ಜನವರಿಯಲ್ಲೇ ಸರ್ಕಾರದ ಆದೇಶ ಕೊಡಿಸಲಾಗಿದೆ. ಆಡಳಿತಾತ್ಮಕ ಅನುಮೋದನೆ ಸೇರಿದಂತೆ ಮೊದಲ ಹಂತದ ಅನುದಾನ ಬಿಡುಗಡೆ ಮಾಡಿದರೂ ಕಾಮಗಾರಿ ವಿಳಂಬ ಮಾಡಲಾಗುತ್ತಿದೆ. ಅಪೂರ್ಣ ಕಾಮಗಾರಿಯಿಂದಾಗಿ ಕಟ್ಟಡ ಶಿಥಿಲಾವಸ್ಥೆ ತಲುಪಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
‘ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕ್ರೈಸ್ನಿಂದ ಅನುಮೋದನೆ ಪಡೆದು ಭವನ ನಿರ್ಮಾಣಕ್ಕೆ ಅನುವು ಮಾಡಿಕೊಟ್ಟಿತ್ತು. ನಂತರ ಬಂದ ಬಿಜೆಪಿ ಸರ್ಕಾರ, ಸರ್ಕಾರ ಆದೇಶ ಮಾಡಿಲ್ಲವೆಂಬ ತಾಂತ್ರಿಕ ನೆಪ ಹೇಳಿ ಕಾಮಗಾರಿ ತಡೆ ಹಿಡಿದಿತ್ತು. ಇನ್ನು ಎರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸದೆ ಇದ್ದರೆ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ’ ಎಂದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಕಾಮಗಾರಿ ಪೂರ್ಣಗೊಳಿಸದಿದ್ದಲ್ಲಿ ಆಡಳಿತಾತ್ಮಕವಾಗಿ ಮುಂದಿನ ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಅಲ್ಪಸಂಖ್ಯಾತ ಇಲಾಖೆ ಕಾರ್ಯದರ್ಶಿ ಮಣಿವಣ್ಣನ್ ಅವರಿಗೆ ತಿಳಿಸಲಾಗಿದೆ ಎಂದು ಹೇಳಿದರು.