ಹುಬ್ಬಳ್ಳಿ: ವಿಮಾನ ನಿಲ್ದಾಣದ ಹಿಂಭಾಗದಲ್ಲಿರುವ ಜಗದೀಶ ನಗರದ ಆಶ್ರಯ ಮನೆಗಳ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಬೇಕು, ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಜಗದೀಶ ನಗರ ಆಶ್ರಯ ನಿವಾಸಿಗಳ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.
2014ನೇ ಸಾಲಿನಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಆಶ್ರಯ ಫಲಾನುಭವಿಗಳಿಗೆ ಸಾಲಮನ್ನಾ ಪತ್ರ ನೀಡಬೇಕು, 2015ನೇ ಸಾಲಿನಿಂದ ಹೊಸದಾಗಿ ನಿರ್ಮಿಸುತ್ತಿರುವ 188 ಮನೆಗಳನ್ನು ಪೂರ್ಣಗೊಳಿಸಿ ಫಲಾನಭವಿಗಳಿಗೆ ವಿತರಿಸಬೇಕು ಎಂದು ಆಗ್ರಹಿಸಿದ್ದಾರೆ.
ಹೊಸ ಮನೆಗಳ ನಿರ್ಮಾಣ ಕಾಮಗಾರಿ ತೀರಾ ಕಳಪೆಯಾಗಿದೆ. ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಜಿಲ್ಲಾಡಳಿತಕ್ಕೆ ಬಂದ ₹8.19 ಕೋಟಿ ದುರ್ಬಳಕೆ ಅಗಿರುವ ಬಗ್ಗೆ ಅನುಮಾನವಿದ್ದು, ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಹಿತರಕ್ಷಣಾ ಸಮಿತಿಯ ಕಾರ್ಯದರ್ಶಿ ಪ್ರೇಮನಾಥ ಚಿಕ್ಕತುಂಬಳ ಒತ್ತಾಯಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಶೆಟ್ಟರ್ ‘ಬಡಾವಣೆಗೆ ಸಂಬಂಧಿಸಿದ ಶಾಸಕ ಅರವಿಂದ ಬೆಲ್ಲದ ಜೊತೆ ಮಾತನಾಡಿ ಕ್ರಮ ಜರುಗಿಸುತ್ತೇನೆ’ ಎಂದು ಭರವಸೆ ನೀಡಿದರು.