ಹುಬ್ಬಳ್ಳಿ: ‘ಹಿಂದುಳಿದವರಿಗೆ ನೀಡುತ್ತಿರುವ ಮೀಸಲಾತಿಯಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಬಿಜೆಪಿಯ ಹುಬ್ಬಳ್ಳಿ– ಧಾರವಾಡ ಮಹಾನಗರ ಜಿಲ್ಲಾ ಕಲೆ ಮತ್ತು ಸಾಂಸ್ಕೃತಿಕ ಪ್ರಕೋಷ್ಠ– ಶಿಕ್ಷಕರ ಪ್ರಕೋಷ್ಠದಿಂದ ಇಲ್ಲಿನ ಬೆಂಡಿಗೇರಿಯ ಬಿ.ಸಿ.ಎಂ ವಿದ್ಯಾರ್ಥಿ ನಿಲಯದಲ್ಲಿ ಸೋಮವಾರ ಆಯೋಜಿಸಿದ್ದ ಜ್ಯೋತಿಬಾ ಫುಲೆ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ದೇಶಕ್ಕಾಗಿ ಹುತಾತ್ಮರಾದವರ ಬಗ್ಗೆ ಕೇಂದ್ರ ಸರ್ಕಾರದಿಂದ ಜನರಿಗೆ ಪರಿಚಯಿಸಲಾಗುತ್ತಿದೆ. ಈ ಹಿಂದೆ ಒಂದು ಪರಿವಾರ ಒಂದಿಡೀ ಶತಮಾನ ಗಾಂಧಿ ಹೆಸರಿನಲ್ಲೇ ಕಾಲ ಕಳೆದಿದೆ. ಈಗ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ಟೀಕಿಸಿದರು.
‘ಕಾಂಗ್ರೆಸ್ನವರು ಡಾ.ಬಿ.ಆರ್ ಅಂಬೇಡ್ಕರ್ ಅವರಿಗೂ ಅನ್ಯಾಯ ಮಾಡಿದ್ದರು. ಅವರು ಚುನಾವಣೆಗೆ ನಿಂತಾಗ ಸೋಲಿಸಿದ್ದರು. ನಾವು ಅಧಿಕಾರಕ್ಕೆ ಬಂದ ಮೇಲೆ ಅಂಬೇಡ್ಕರ್ ಅವರಿಗೆ ಗೌರವ ನೀಡುವ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ ದಲಿತರು ಹಾಗೂ ಹಿಂದುಳಿದವರನ್ನು ಮತ ಬ್ಯಾಂಕ್ ಮಾಡಿಕೊಂಡಿದೆ’ ಎಂದು ಕಿಡಿಕಾರಿದರು.
ಬಿಜೆಪಿ ಮುಖಂಡರಾದ ಚಂದ್ರಶೇಖರ ಗೋಕಾಕ, ಅಶೋಕ ಕಾಟವೆ, ಪ್ರಭು ನವಲಗುಂದಮಠ, ದತ್ತಮೂರ್ತಿ ಕುಲಕರ್ಣಿ, ಶಿವಾನಂದ ಮುತ್ತಣ್ಣವರ, ಪ್ರತಿಭಾ ಪವಾರ, ಜಸ್ವಂತ ಜಾಧವ, ಸಂಜಯ ಕಪಟಕರ ಇದ್ದರು.