ಹುಬ್ಬಳ್ಳಿ: ‘ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿ ಪಾಳಯದಲ್ಲಿ ಆತಂಕ ಸೃಷ್ಟಿಸಿದೆ. ಅದಕ್ಕಾಗಿ ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲು ಅದು ಷಡ್ಯಂತ್ರ ನಡೆಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಆರೋಪಿಸಿದರು.
ಸಂವಿಧಾನ ಜಾಗೃತಿ ಜಾಥಾ ಅಭಿಯಾನದ ಅಂಗವಾಗಿ ಧಾರವಾಡ ಜಿಲ್ಲಾಡಳಿತ, ಹು–ಧಾ ಮಹಾನಗರ ಪಾಲಿಕೆ ಇತರ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಪಾರಂಪರಿಕ ನಡಿಗೆ’ ಮತ್ತು ‘ಪಂಜಿನ ಮೆರವಣಿಗೆ’ ಕಾರ್ಯಕ್ರಮ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪಟ್ಟಿಯಲ್ಲಿ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಶನಿವಾರ ಪಾಲಿಕೆ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಕಾಂಗ್ರೆಸ್ ಸಾಧನೆ ಹಾಗೂ ಜನಮನ್ನಣೆ ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಹೇಗಾದರೂ ಮಾಡಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬೀಳಿಸಬೇಕು ಎಂದು ಹುನ್ನಾರ ನಡೆಸುತ್ತಿದೆ. ನಾಡಿನ ಜನರ ಆಶೀರ್ವಾದ ಇರುವವರೆಗೂ ಏನೂ ಮಾಡಲು ಸಾಧ್ಯವಿಲ್ಲ’ ಎಂದರು.
ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ‘ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ್ದ ಸಂವಿಧಾನವನ್ನು ಬದಲಾಯಿಸುತ್ತೇವೆ ಎನ್ನುವ ಭೂಪರಿಗೆ ನಾವು ಸಂವಿಧಾನ ಜಾಗೃತಿ ಜಾಥಾ ಮೂಲಕ ಠಕ್ಕರ್ ನೀಡಿದ್ದೇವೆ. ಮನುವಾದಿಗಳು ಭಾರತದ ಸಂವಿಧಾನವನ್ನು ಒಪ್ಪಿಕೊಳ್ಳುತ್ತಿಲ್ಲ. ಅದನ್ನು ಕಿತ್ತೊಗೆಯಲು ಷಡ್ಯಂತ್ರ ನಡೆಸುತ್ತಿದ್ದಾರೆ. ನಮ್ಮ ಸಂವಿಧಾನ 75 ವರ್ಷಗಳಿಂದ ಶೋಷಿತ ಹಾಗೂ ಬಡ ವರ್ಗದವರನ್ನು ಕಾಪಾಡಿಕೊಂಡು ಬರುತ್ತಿದೆ. ಅದರ ಜಾಗೃತಿಗೆ ಜಿಲ್ಲೆಯಲ್ಲಿ ಹಮ್ಮಿಕೊಂಡ ಜಾಥಾ ಕಾರ್ಯಾಕ್ರಮಗಳು ಇಂಡಿಯಾ ಬುಕ್ ಆಫ್ ರೆಕಾರ್ಡ್ ಪಟ್ಟಿಗೆ ಸೇರ್ಪಡೆಯಾಗಿದ್ದು ಹೆಮ್ಮೆಯ ಸಂಗತಿ’ ಎಂದು ಹೇಳಿದರು.
ಇಂಡಿಯಾ ಬುಕ್ ಆಫ್ ರೆಕಾರ್ಡ್ನ ನಿರ್ಣಾಯಕ ನರವಿಜಯ ಯಾದವ್, ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಮಾತನಾಡಿದರು. ಸಿಇಒ ಸ್ವರೂಪಾ ಟಿ.ಕೆ., ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಅಲ್ಲಾಭಕ್ಷ, ಶಹರ ತಹಶೀಲ್ದಾರ್ ಕಲಗೌಡ ಪಾಟೀಲ, ಪಾಲಿಕೆ ವಿರೋಧ ಪಕ್ಷದ ನಾಯಕಿ ಸುವರ್ಣಾ ಕಲಕುಂಟ್ಲ, ಪಾಲಿಕೆ ಸದಸ್ಯ ಸಂದಿಲ್ ಕುಮಾರ ಉಪಸ್ಥಿತರಿದ್ದರು.
ಅಧಿಕಾರಕ್ಕಾಗಿ ಬಿಜೆಪಿ ದೇಶದ ಇತಿಹಾಸ ತಿರುಚಿ ಹೊಸ ಇತಿಹಾಸ ಸೃಷ್ಟಿಸಿ ಅದೇ ಸತ್ಯ ಎಂದು ಬಿಂಬಿಸಲು ಹೊರಟಿದೆ. ಸಾರ್ವಜನಿಕರು ಸತ್ಯ ತಿಳಿಯಲು ಮುಂದಾಗಬೇಕು
-ಸಂತೋಷ ಲಾಡ್ ಜಿಲ್ಲಾ ಉಸ್ತುವಾರಿ ಸಚಿವ
22ದಿನ ಪ್ರಥಮ ಸ್ಥಾನ: ಡಿ.ಸಿ
‘ಜಿಲ್ಲೆಯಲ್ಲಿ ಜ. 26ರಿಂದ ಆರಂಭವಾದ ಜಾಗೃತಿ ಜಾಗೃತಿ ಜಾಥಾ 144 ಗ್ರಾಮ ಪಂಚಾಯ್ತಿ ಹಾಗೂ ಮಹಾನಗರ ಪಾಲಿಕೆಯ 82 ವಾರ್ಡ್ಗಳಲ್ಲಿ ಸಂಚರಿಸಿ ಜನಜಾಗೃತಿ ಮೂಡಿಸಿದೆ. ವಿವಿಧ ಜಿಲ್ಲೆಗಳ ದೈನಂದಿನ ರ್ಯಾಂಕಿಂಗ್ ಪಟ್ಟಿಯಲ್ಲಿ ನಮ್ಮ ಜಿಲ್ಲೆ 22ದಿನ ಪ್ರಥಮ ಸ್ಥಾನ ಪಡೆದಿದೆ. ಪಾರಂಪರಿಕ ನಡಿಗೆ ಮತ್ತು ಪಂಜಿನ ಮೆರವಣಿಗೆ ಕಾರ್ಯಕ್ರಮ ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆಯಾಗಿದ್ದು ಸಂತಸದ ವಿಷಯ’ ಎಂದು ಜಿಲ್ಲಾಧಿಕಾರಿ ದಿವ್ಯಾಪ್ರಭು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.