ಹುಬ್ಬಳ್ಳಿ: ಅವಳಿ ನಗರಗಳ ಖಾನಾವಳಿ, ಡಾಬಾಗಳಲ್ಲಿ ಮತ್ತು ಕೆಲವು ಮನೆಗಳಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡಲಾಗುತ್ತಿದ್ದು, ಇದನ್ನು ತಡೆಯಬೇಕು ಎಂದು ಆಗ್ರಹಿಸಿ ಸಮಗ್ರ ಕರ್ನಾಟಕ ರಕ್ಷಣಾಸೇನೆ ರಾಜ್ಯ ಘಟಕದ ಅಧ್ಯಕ್ಷ ಕುಬೇರ ವಿ. ಪವಾರ ಹಾಗೂ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿದರು.
ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಮಹಾತ್ಮ ಗಾಂಧಿ ಭಾವಚಿತ್ರ ಹಾಗೂ ಮದ್ಯದ ಬಾಟಲ್ ಮುಂದಿಟ್ಟುಕೊಂಡು ಪ್ರತಿಭಟಿಸಿ ‘ಅನುಮತಿ ಇಲ್ಲದೆ ಮಾರಾಟ ಮಾಡುತ್ತಿರುವುದನ್ನು ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದರೂ ಕ್ರಮಕೈಗೊಂಡಿಲ್ಲ. ಶೀಘ್ರದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ಜನರನ್ನು ಸೇರಿಸಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡಲಾಗುವುದು’ ಎಂದು ಜಿಲ್ಲಾಧಿಕಾರಿ ಹಾಗೂ ಅಬಕಾರಿ ಸಚಿವರಿಗೆ ಸಲ್ಲಿಸಿದ ಮನವಿಯಲ್ಲಿ ಆಗ್ರಹಿಸಿದ್ದಾರೆ.
ಸೇನೆ ಸದಸ್ಯರಾದ ಶಂಕರನಾಗ ಶಿಂಧೆ, ಕುಮಾರ ಅಳಕವಾಡಿ, ಯುವರಾಜ ಬಳ್ಳಾರಿ, ಗುರು ಪಾಟೀಲ, ಪ್ರಮೋದ ಸರವದೆ ಪಾಲ್ಗೊಂಡಿದ್ದರು.