ಹುಬ್ಬಳ್ಳಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯ ಗುತ್ತಿಗೆದಾರರಿಗೆ ₹1 ಲಕ್ಷದಿಂದ ₹5 ಲಕ್ಷವರೆಗಿನ ಕಾಮಗಾರಿಗಳನ್ನು ತುಂಡು ಗುತ್ತಿಗೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಶನಿವಾರ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಸದಸ್ಯರು ಹೆಸ್ಕಾಂ ಕಚೇರಿ ಮುಂದೆ ಮೌನ ಪ್ರತಿಭಟನೆ ನಡೆಸಿದರು.
ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರಿಂದ ಮೂಲ ಸೌಕರ್ಯ ಶುಲ್ಕವನ್ನು ಹೆಚ್ಚಿನ ಪ್ರಮಾಣದಲ್ಲಿ ವಸೂಲು ಮಾಡಲಾಗುತ್ತಿದೆ. ಇದರಿಂದ ಗ್ರಾಹಕರು ವಿದ್ಯುತ್ ಸಂಪರ್ಕ ಪಡೆಯಲು ತೊಂದರೆ ಅನುಭವಿಸುತ್ತಿದ್ದಾರೆ. ಅದನ್ನು ಕೂಡಲೇ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.
ವಸತಿ, ವಾಣಿಜ್ಯ, ಕೈಗಾರಿಕೆ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕಕ್ಕೆ ಸ್ವಾಧೀನಾನುಭವ ಪತ್ರ ಸಲ್ಲಿಸುವಂತೆ ಸೂಚಿಸುತ್ತಿರುವುದರಿಂದ ಗ್ರಾಹಕರು ತೊಂದರೆ ಅನುಭವಿಸುತ್ತಿದ್ದಾರೆ. ಗಂಗಾ ಕಲ್ಯಾಣ, ಕುಡಿಯುವ ನೀರು ಕಾಮಗಾರಿಗಳನ್ನು ಕೆಲವೇ ಬಂಡವಾಳಶಾಹಿ ಗುತ್ತಿಗೆದಾರರಿಗೆ ನೀಡುತ್ತಿರುವುದರಿಂದ ಹಾಲಿ ಕಾಮಗಾರಿ ನಿರ್ವಹಿಸುತ್ತಿರುವವರಿಗೆ ಕೆಲಸಗಳಿಲ್ಲದಂತಾಗಿದೆ ಎಂದು ದೂರಿದರು.
ವಿದ್ಯುತ್ ಕಂಪನಿಗಳನ್ನು ಖಾಸಗೀಕರಣ ಮಾಡುವ ಪ್ರಸ್ತಾವವನ್ನು ಕೈಬಿಡಬೇಕು. ಅತಿವೃಷ್ಟಿಯಾದಾಗ ನೆಲಕ್ಕುರುಳಿದ ವಿದ್ಯುತ್ ಕಂಬಳ ಕಾಮಗಾರಿ ಮಾಡಿಸಿಕೊಂಡು ಕೋಟ್ಯಂತರ ರೂಪಾಯಿ ಬಿಲ್ ಪಾವತಿಸಿಲ್ಲ. ತುರ್ತು ಸಂದರ್ಭದಲ್ಲಿ ಸ್ಥಳೀಯರನ್ನು ಬಳಸಿಕೊಂಡು, ಕಾಮಗಾರಿಗಳನ್ನು ಬೇರೆಯವರಿಗೆ ನೀಡುವುದನ್ನು ವಿರೋಧಿಸಿದರು.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಮುಖ್ಯ, ಉಪ ವಿದ್ಯುತ್ ಕೇಂದ್ರಗಳಲ್ಲಿ ಕೆಲಸ ನಿರ್ವಹಣೆ ಮಾಡುತ್ತಿರುವ ಹಾಲಿ ಗುತ್ತಿಗೆದಾರರನ್ನು ಕಡೆಗಣಿಸಿ ಟೆಂಡರ್ ಕರೆಯುತ್ತಿರುವುದನ್ನು ರದ್ದು ಪಡಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಘಟಕದ ಅಧ್ಯಕ್ಷ ಎಸ್.ಎಂ. ಕೃಷ್ಣ, ಉಪಾದ್ಯಕ್ಷ ವಿಜಯಕುಮಾರ ಗುಡ್ಡದ, ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ ಮುತ್ತಗಿ, ಉಪಾಧ್ಯಕ್ಷ ಪ್ರಸನ್ನ ತಳವಾರ, ಕಿರಣ ಹಿರೇಮಠ, ತುಷಾರ ಬದ್ದಿ, ಜಗದೀಶ ಕರಿಗೌಡರ ಇದ್ದರು.