ಉಪ್ಪಿನಬೆಟಗೇರಿ: ವಿದ್ಯಾರ್ಥಿಗಳ ಭವಿಷ್ಯರೂಪಿಸುವಲ್ಲಿ ಉಪ್ಪಿನಬೆಟಗೇರಿಯ ಶತಮಾನೋತ್ತರ ಶಾಲೆಯ ಕೊಡುಗೆ ಸ್ಮರಣೀಯವಾದದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಇಲ್ಲಿನ ಸರ್ಕಾರಿ ಮಾದರಿ ಕನ್ನಡ ಗಂಡು ಮಕ್ಕಳ ಪ್ರಾಥಮಿಕ ಶಾಲೆಯ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ ಶಾಲೆಯ ಶತಮಾನೋತ್ತರ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಶಾಲೆ ಆರಂಭವಾಗಿ 157 ವರ್ಷಗಳಾಗಿದ್ದು, ಹಳೆಯ ವಿದ್ಯಾರ್ಥಿಗಳು ಶತಮಾನೋತ್ತರ ಸುವರ್ಣ ಮಹೋತ್ಸವ ಆಚರಿಸುತ್ತಿರುವುದು ಅಭಿನಂದನೀಯ. ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು(ಎನ್ಇಪಿ) ಜಾರಿಗೆ ತಂದಿದ್ದು, ಇದರಲ್ಲಿ ಯುವಕರ ಕೌಶಲಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ದೇಶದ ಅಭಿವೃದ್ಧಿಗೆ ಎನ್ಇಪಿ ಸಹಕಾರಿ ಎಂದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಈ ಶಾಲೆ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ಶಾಲೆಯ ಹಿಂಭಾಗದಲ್ಲಿರುವ ನಾಲ್ಕು ಎಕರೆ ಜಾಗವನ್ನು ಶೈಕ್ಷಣಿಕ ಚಟುವಟಿಕೆಗೆ ಕೊಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಶಾಸಕ ಅಮೃತ ದೇಸಾಯಿ, ಮಾಜಿ ಶಾಸಕಿ ಸೀಮಾ ಮಸೂತಿ ಹಾಗೂ ಕರ್ನಾಟಕ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ತವನಪ್ಪ ಅಷ್ಟಗಿ ಮಾತನಾಡಿದರು. ಸ್ಥಳೀಯ ಮೂರುಸಾವಿರ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ ಸಾನ್ನಿದ್ಯ ವಹಿಸಿದ್ದರು. ಗ್ರಾಮಸ್ಥರು, ಶಿಕ್ಷಕರು ಮನವಿ ಪತ್ರಗಳನ್ನು ಸಲ್ಲಿಸಿದರು.
ಇದಕ್ಕೂ ಮುನ್ನ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾಯಿರಾಬಾನು ಲಾಲ್ಮೀಯಾ ಧ್ವಜಾರೋಹಣ ನೆರವೇರಿಸಿದರು. ಶತಮಾನೋತ್ತರ ಸುವರ್ಣ ಮಹೋತ್ಸವ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷಕ ವೀರಣ್ಣ ಪರಾಂಡೆ ಭುವನೇಶ್ವರಿದೇವಿ ಮೂರ್ತಿಯ ಮೆರವಣಿಗೆಗೆ ಚಾಲನೆ ನೀಡಿದರು.
ಧಾರವಾಡ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಉಮೇಶ ಬಮ್ಮಕ್ಕನವರ, ಗಿರೀಶ ಪದಕಿ, ಸುರೇಶ ಹುಗ್ಗಿ, ವಿದ್ಯಾಲೋಲಿ, ಕಲ್ಲಪ್ಪ ಪುಡಕಲಕಟ್ಟಿ, ಚನಬಸಪ್ಪ ಮಸೂತಿ, ರಾಮಲಿಂಗಪ್ಪ ನವಲಗುಂದ, ಶಶಿಮೌಳಿ ಕಲಕರ್ಣಿ, ಗುರು ತಿಗಡಿ, ಕಾಶಪ್ಪ ದೊಡವಾಡ, ರವೀಂದ್ರ ಯಲಿಗಾರ, ಮುಖ್ಯಶಿಕ್ಷಕ ಎಂ.ಎಂ. ದೊಡಮನಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.