ಹುಬ್ಬಳ್ಳಿ: ‘ಜೈನ ಧರ್ಮಅಭಿವೃದ್ಧಿ ನಿಗಮ ಸ್ಥಾಪನೆ ಸೇರಿ ವಿವಿಧ ಬೇಡಿಕೆಗಳನ್ನು ಫೆಬ್ರುವರಿ 7ರ ಒಳಗೆ ಈಡೇರಿಸಬೇಕು. ಇಲ್ಲದಿದ್ದರೆ, ಫೆಬ್ರುವರಿ 8ರಂದು ಸಮುದಾಯದ ಒಂದು ಲಕ್ಷ ಜನರೊಂದಿಗೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಶಮನೇವಾಡಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು’ ಎಂದು ಹುಬ್ಬಳ್ಳಿಯ ವರೂರಿನ ನವಗ್ರಹ ತೀರ್ಥಕ್ಷೇತ್ರದ ಆಚಾರ್ಯ ಗುಣಧರ ನಂದಿ ಮಹಾರಾಜರು ಆಗ್ರಹಿಸಿದರು.
‘ರಾಜಸ್ಥಾನದಲ್ಲಿ ಈಗಾಗಲೇ ನಿಗಮ ಸ್ಥಾಪಿಸಲಾಗಿದ್ದು, ರಾಜ್ಯದಲ್ಲಿಯೂ ಈ ಬಗ್ಗೆ ಕ್ರಮ ಕೈಗೊಳ್ಳಬೇಕು. ಜೈನ ಮುನಿಗಳ ವಿಹಾರ ಸಂದರ್ಭದಲ್ಲಿ ಶಾಲಾ, ಕಾಲೇಜು, ಪ್ರವಾಸಿ ಮಂದಿರಗಳಲ್ಲಿ ವಸತಿಗೆ ವ್ಯವಸ್ಥೆ ಕಲ್ಪಿಸಬೇಕು’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
‘ಕಳೆದ ವರ್ಷ ಜುಲೈನಲ್ಲಿ ನವಗ್ರಹತೀರ್ಥ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಬೇಡಿಕೆಗಳ ಈಡೇರಿಸುವ ಭರವಸೆ ನೀಡಿದ್ದರು. ಆದರೆ, ಈವರೆಗೆ ಈಡೇರಿಲ್ಲ’ ಎಂದು ದೂರಿದರು.
‘ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೊಡುವ ವಿದ್ಯಾರ್ಥಿವೇತನದಲ್ಲೂ ಕಡಿತ ಮಾಡಲಾಗಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಅದನ್ನು ಮೊದಲಿನಂತೆ ಮುಂದುವರಿಸಬೇಕು’ ಎಂದು ಆಗ್ರಹಿಸಿದರು.
‘ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಜೈನ ಮುನಿಗಳಿಗೂ ಆಹ್ವಾನ ಬಂದಿದೆ. ಐದು ದಿನ ಜೈನಮುನಿಗಳು ಅಲ್ಲಿ ಅನ್ನಸಂತರ್ಪಣೆ ಸೇವೆ ಸಲ್ಲಿಸುವರು’ ಎಂದರು.