ಧಾರವಾಡ: ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಮತ್ತು ವಿನಯ ಸೋದರ ಮಾವ ಚಂದ್ರಶೇಖರ ಇಂಡಿ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜ. 8ರವರೆಗೆ ವಿಸ್ತರಿಸಿ ಇಲ್ಲಿನ 4ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ.
ಕೊಲೆ ಸಂಚು ಆರೋಪದಡಿ ಬೆಳಗಾವಿ ಜೈಲಿನಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಹಾಗೂ ಪ್ರಕರಣದಲ್ಲಿ ಶಸ್ತ್ರಾಸ್ತ್ರ ಪೂರೈಕೆ ಆರೋಪದಡಿ ಧಾರವಾಡ ಜೈಲಿನಲ್ಲಿರುವ ವಿನಯ ಸೋದರ ಮಾವ ಚಂದ್ರಶೇಖರ ಇಂಡಿ ಅವರ ನ್ಯಾಯಾಂಗ ಬಂಧನ ಅವಧಿ ಸೋಮವಾರ ಕೊನೆಗೊಂಡಿತ್ತು.
ಸೋಮವಾರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಸಿ.ಎಂ.ಗಂಗಾಧರ ಅವರು ಇಬ್ಬರು ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದರು.
ವಿನಯ ಕುಲಕರ್ಣಿ ಪರ ಜಾಮೀನು ಕೋರಿ ಹೈಕೋರ್ಟ್ನಲ್ಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಜ. 6ರಂದು ನಡೆಯಲಿದೆ.