ಹುಬ್ಬಳ್ಳಿ: ‘ಪ್ರಜ್ವಲ್ ರೇವಣ್ಣ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಅವರೇ ಹೇಳಿದ್ದಾರೆ. ಪ್ರಜ್ವಲ್ ಈಗ ಬಿಜೆಪಿ–ಜೆಡಿಎಸ್ ಮೈತ್ರಿ ಅಭ್ಯರ್ಥಿ. ಅವರು ಗೆದ್ದ ನಂತರ ಪ್ರಶ್ನಿಸಿದರೆ, ನಾವು ಉತ್ತರಿಸುತ್ತೇವೆ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಆರ್.ಅಶೋಕ ಹೇಳಿದರು.
‘ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರ ಇದ್ದಾಗ ಪ್ರಜ್ವಲ್ ರೇವಣ್ಣ ಅವರಿಗೆ ಟಿಕೆಟ್ ಕೊಟ್ಟು, ಪ್ರಚಾರ ಮಾಡಿ, ಗೆಲ್ಲಿಸಿದ್ದು ಯಾರು ಎಂಬುದನ್ನು ಕಾಂಗ್ರೆಸ್ನವರೇ ಉತ್ತರಿಸಲಿ’ ಎಂದು ಅವರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.
‘ಪೆನ್ಡ್ರೈವ್ನಲ್ಲಿರುವ ವಿಡಿಯೊಗಳ ಕುರಿತ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ವಿಡಿಯೊಗಳ ಬಗ್ಗೆ ಸತ್ಯಾಸತ್ಯತೆ ಹೊರಬಂದು ತಪ್ಪಿತಸ್ಥರಿಗೆ ಕಾನೂನಿನ ಅಡಿ ಶಿಕ್ಷೆ ಆಗಬೇಕು’ ಎಂದು ಒತ್ತಾಯಿಸಿದರು.
‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು, ಲವ್ ಜಿಹಾದ್ ತಂದಿದೆ. ಅದರ ಪ್ರಯೋಗ ಹುಬ್ಬಳ್ಳಿಯಲ್ಲಿ ಆಗಿದೆ. ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವೆ. ನೇಹಾಗೆ ನ್ಯಾಯ ದೊರಕಿಸುವ ಕೆಲಸ ಮಾಡುವೆ’ ಎಂದರು.
ಬರ ಪರಿಹಾರ ರೈತರಿಗೆ ತಲುಪಿಸಿ:
‘ಕೇಂದ್ರ ಸರ್ಕಾರವು ರಾಜ್ಯಕ್ಕೆ ಬಿಡುಗಡೆ ಮಾಡಿರುವ ಬರ ಪರಿಹಾರಕ್ಕೆ ಕಾಂಗ್ರೆಸ್ ಸರ್ಕಾರ ತನ್ನ ಪಾಲು ಸೇರಿಸಿ ನೇರವಾಗಿ ರೈತರಿಗೆ ತಲುಪಿಸಬೇಕು. ಆ ಮೂಲಕ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿಲ್ಲ ಎಂಬುದನ್ನು ತೋರಿಸಬೇಕು. ಈ ಹಣವನ್ನು ಲೂಟಿ ಮಾಡಿ ಮಧ್ಯಪ್ರದೇಶ, ರಾಜಸ್ಥಾನಕ್ಕೆ ಕಳಿಸಬಾರದು’ ಎಂದರು.