ಹುಬ್ಬಳ್ಳಿ: ಜಿಮ್ಖಾನ ಮೈದಾನದಲ್ಲಿ ಸ್ಪೋರ್ಟ್ಸ್ ಮತ್ತು ರಿಕ್ರಿಯೇಶನ್ ಕ್ಲಬ್ನ ಕಾಮಗಾರಿಯನ್ನು ನಿಲ್ಲಿಸುವಂತೆ ಒತ್ತಾಯಿಸಿ ಹುಬ್ಬಳ್ಳಿ ಸ್ಪೋರ್ಟ್ಸ್ ಗ್ರೌಂಡ್ ಬಚಾವೊ ಸಮಿತಿ ಪದಾಧಿಕಾರಿಗಳು ಇದೇ 11ರಂದು ಬೆಳಿಗ್ಗೆ 10.30 ಗಂಟೆಗೆ ಇಲ್ಲಿ ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ.
ಸದರಿ ಕಾಮಗಾರಿಯನ್ನು ನಿಲ್ಲಿಸಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಗಳವಾರ ಸಮಿತಿ ಪದಾಧಿಕಾರಿಗಳನ್ನು ಒಳಗೊಂಡ ನಿಯೋಗ ಪಾಲಿಕೆ ಆಯುಕ್ತ ರಮಣದೀಪ್ ಚೌಧರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಸಂಜೆ 5 ಗಂಟೆ ಒಳಗಾಗಿ ಕ್ರಮ ಜರುಗಿಸುವಂತೆಯೂ ಮನವಿ ಮಾಡಲಾಗಿತ್ತು. ಆದರೆ, ಈ ವಿಷಯ ಕುರಿತಂತೆ ಸಮಗ್ರ ಮಾಹಿತಿ ಪಡೆದು, ಪರಿಶೀಲಿಸಿದ ನಂತರ ಕ್ರಮ ಕೈಗೊಳ್ಳುವುದಾಗಿ ಆಯುಕ್ತ ಚೌಧರಿ ಸ್ಪಷ್ಟಪಡಿಸಿದರು. ಹೀಗಾಗಿ ಆಯುಕ್ತರ ಈ ಧೋರಣೆಯನ್ನು ಖಂಡಿಸಿ ಬುಧವಾರ (ಸೆ. 11) ಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾಗಿ ಸಮಿತಿ ಅಧ್ಯಕ್ಷ ಸಿ.ಬಿ.ಎಲ್.ಹೆಗಡೆ ತಿಳಿಸಿದ್ದಾರೆ.
ಈ ಸಂಬಂಧ, ಜಿಲ್ಲಾಧಿಕಾರಿ ಸಮೀರ್ ಶುಕ್ಲಾ, ಪೊಲೀಸ್ ಆಯುಕ್ತ ಬಿ.ಎ.ಪದ್ಮನಯನ, ಹುಬ್ಬಳ್ಳಿ–ಧಾರವಾಡ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ತಿಪ್ಪೇಶಿ ಅವರಿಗೂ ಪ್ರತ್ಯೇಕವಾಗಿ ಮನವಿ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ವೆಂಕಟೇಶ ಸವದತ್ತಿ, ವಿನಾಯಕ ಶಿರೋಳಿಕರ್ ಹಾಗೂ ಇತರರು ನಿಯೋಗದಲ್ಲಿದ್ದರು.