ಹುಬ್ಬಳ್ಳಿ: ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ವಾರ್ತಾ ಇಲಾಖೆ, ಜಲಮಂಡಳಿಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನದ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಜೆ.ಎಂ.ಎಫ್.ಸಿ, 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ರೆಹನಾ ಸುಲ್ತಾನ ಕಾರ್ಯಕ್ರಮ ಉದ್ಘಾಟಿಸಿದರು. ಹುಬ್ಬಳ್ಳಿ ತಾಲ್ಲೂಕು ವಕೀಲರ ಸಂಘ ಅಧ್ಯಕ್ಷತೆ ಡಿ.ಎಂ. ನರಗುಂದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯನಿರ್ವಾಹಕ ಎಂಜಿನಿಯರ್ ಎಸ್. ಕರಿಯಪ್ಪ, ಸಹಾಯಕ ಸರ್ಕಾರಿ ಅಭಿಯೋಜಕ ಪ್ರಕಾಶ ಎಸ್ ಸುಂಕದ ಭಾಗವಹಿಸಿದ್ದರು.
ವಕೀಲ ವಿಶ್ವನಾಥ ಬಿಜಗತ್ತಿ ವಿಶ್ವ ಜಲ ದಿನಾಚರಣೆಯ ಮಹತ್ವದ ಬಗ್ಗೆ ಉಪನ್ಯಾಸ ನೀಡಿದರು. ‘ನಮ್ಮ ದೇಶದಲ್ಲಿ ಪ್ರತಿ 21 ಸೆಕೆಂಡಿಗೆ ಕಲುಷಿತ ನೀರಿನಿಂದ ಒಬ್ಬ ವ್ಯಕ್ತಿ ಸಾಯುತ್ತಿದ್ದಾನೆ. ನೀರು ಕಲುಷಿತವಾಗದ ರೀತಿಯಲ್ಲಿ ಎಲ್ಲರೂ ಜಾಗ್ರತೆ ವಹಿಸಬೇಕು. ವಿಶ್ವ ಜಲ ದಿನಾಚರಣೆ ಅಂಗವಾಗಿ ಇಡೀ ಜಗತ್ತಿಗೆ ನೀರನ್ನು ಮಿತವಾಗಿ ಬಳಸಿ ಎಂದು ಸಂದೇಶ ನೀಡಲಾಗುತ್ತಿದೆ.