ಧಾರವಾಡ: ‘ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಪ್ರಸಕ್ತ ವರ್ಷದ ಚಳಿಗಾಲದ ಅಧಿವೇಶನದಲ್ಲಿ. ಕೃಷಿ ಮತ್ತು ನೀರಾವರಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದಿಂದ ಯಾವುದೇ ಸ್ಪಷ್ಟ ನಿರ್ಧಾರ ಹೊರಬರಲಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.
ಇಲ್ಲಿನ ಶಾಸಕ ಎನ್.ಎಚ್.ಕೋನರಡ್ಡಿ ಅವರ ನಿವಾಸದಲ್ಲಿ ಶುಕ್ರವಾರ ಔತಣಕೂಟದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವೈಯಕ್ತಿಕವಾಗಿ ಒಬ್ಬ ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಾನು ಅಧಿವೇಶನದಲ್ಲಿ ಕೆಲಸ ಮಾಡಿದ್ದೇನೆ. ಈ ಕೆಲಸ ನನಗೆ ತೃಪ್ತಿ ತಂದಿದೆ. ಸದನದ ಕಲಾಪದಲ್ಲಿ ಕೆಲವೊಂದಿಷ್ಟು ವಿಚಾರಗಳ ಬಗ್ಗೆ ಸರ್ಕಾರದ ಗಮನ ಸೆಳೆದಿದ್ದೇನೆ. ಆದರೆ, ಕಾಂಗ್ರೆಸ್ ಸರ್ಕಾರದಿಂದ ಇದಕ್ಕೆ ಪೂರಕವಾದ ಸಕಾರಾತ್ಮಕ ಸ್ಪಂದನೆ ದೊರೆತಿಲ್ಲ. ಈ ಅಧಿವೇಶನ ನಿರಸವಾಗಿ ನಡೆಯಿತು’ ಎಂದರು.
‘ರಾಜ್ಯದ ಹಲವಾರು ಭಾಗಗಳಲ್ಲಿ ಈ ವರ್ಷ ಉತ್ತಮ ಮಳೆಯಾಗಿದೆ. ಅಲ್ಲದೇ ರೈತರು ಉತ್ತಮ ಬೆಳೆಗಳನ್ನು ಬೆಳೆದಿದ್ದಾರೆ. ಆದರೆ, ರೈತರು ಬೆಳೆದ ಬೆಳೆಗಳಿಗೆ ರಾಜ್ಯ ಸರ್ಕಾರದಿಂದ ಉತ್ತಮವಾದ ಲಾಭಾಂಶ ದೊರಕುತ್ತಿಲ್ಲ. ಕಬ್ಬಿಗೆ ರಾಜ್ಯ ಸರ್ಕಾರ ₨ 2,650 ಬೆಂಬಲ ಬೆಲೆಯನ್ನು ಘೋಷಿಸಿದೆ. ಆದರೆ, ಸಕ್ಕರೆ ಕಾರ್ಖಾನೆ ಮಾಲೀಕರು ಯಾವುದೇ ಕಾರಣಕ್ಕೂ ₨ 2 ಸಾವಿರಗಿಂತ ಹೆಚ್ಚು ಕೊಡಲು ಆಗುವುದಿಲ್ಲ ಎನ್ನುತ್ತಿದ್ದಾರೆ. ಸರ್ಕಾರ ಈ ಕುರಿತು ಕಾನೂನು ರಚಿಸಲಾಗುವುದು ಎಂದಿದೆ. ಅಲ್ಲಿಯವರೆಗೂ ನಾವು ಕಾಯುತ್ತೇವೆ. ಬಹುತೇಕ ಸಕ್ಕರೆ ಕಾರ್ಖಾನೆ ಮಾಲೀಕರು ಕಾಂಗ್ರೆಸ್ ಸರ್ಕಾರದ ಸಚಿವರು ಮತ್ತು ಶಾಸಕರೇ ಇದ್ದಾರೆ. ಹೀಗಾಗಿ ಸಕ್ಕರೆ ಕಾರ್ಖಾನೆಗಳ ಮಾಲೀಕರ ಉಳಿವಿಗಾಗಿ ಸರ್ಕಾರ ರೈತರ ಬಗ್ಗೆ ವಿಶೇಷ ಕಾಳಜಿ ವಹಿಸಿಲ್ಲ’ ಎಂದು ಆರೋಪಿಸಿದರು.
ಶಾಸಕರಾದ ಎನ್.ಎಸ್. ಕೋನರಡ್ಡಿ, ಮಧು ಬಂಗಾರಪ್ಪ ಸೇರಿದಂತೆ ಪಕ್ಷದ ಅನೇಕ ಮುಖಂಡರು ಔತಣಕೂಟದಲ್ಲಿ ಪಾಲ್ಗೊಂಡಿದ್ದರು.