ಶಿವಮೊಗ್ಗ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್ ಏ.17ರಂದು ಶಿವಮೊಗ್ಗ ಲೋಕಸಭಾ ಕ್ಷೇತ್ರ ಹಲವೆಡೆ ಜೆಡಿಎಸ್ ಅಭ್ಯರ್ಥಿ ಎಸ್. ಮಧು ಬಂಗಾರಪ್ಪ ಪರ ಚುನಾವಣಾ ಪ್ರಚಾರ ನಡೆಸುವರು.
ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ನೇರವಾಗಿ ಹೆಲಿಕಾಪ್ಟರ್ ಮೂಲಕ ಬಂದು ಸೊರಬ ತಾಲ್ಲೂಕು ಆನವಟ್ಟಿ ಹೆಲಿಪ್ಯಾಡ್ಗೆ ಬೆಳಿಗ್ಗೆ 11ಕ್ಕೆ ಇಳಿಯುವರು. ನಂತರ ಆನವಟ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್, ಜೆಡಿಎಸ್ ಘಟಕಗಳು ಹಮ್ಮಿಕೊಂಡಿರುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸುವರು.
ಮಧ್ಯಾಹ್ನ 12.50ಕ್ಕೆ ಭದ್ರಾವತಿ ತಾಲ್ಲೂಕು ಆನವೇರಿಗೆ ಬಂದು ಅಲ್ಲಿನ ಸಾರ್ವಜನಿಕ ಸಭೆಯಲ್ಲಿ ಮಾತನಾಡುವರು. ನಂತರ ಶಿಕಾರಿಪುರ ಸಭೆಯಲ್ಲಿ ಚುನಾವಣಾ ಪ್ರಚಾರ ನಡೆಸುವರು. ಸಂಜೆ 5ಕ್ಕೆ ಅಲ್ಲಿಂದ ನಿರ್ಗಮಿಸಿ, ಬೆಂಗಳೂರು ತಲುಪಲಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕಾಗೊಡು ತಿಮ್ಮಪ್ಪ, ಅಭ್ಯರ್ಥಿ ಮಧು ಬಂಗಾರಪ್ಪ ಸೇರಿದಂತೆ ಎರಡೂ ಪಕ್ಷಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸವರು ಎಂದು ಜಿಲ್ಲೆಯ ಚುನಾವಣಾ ಉಸ್ತುವಾರಿ ಕಿಮ್ಮನೆ ರತ್ನಾಕರ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಮಾಹಿತಿ ನೀಡಿದರು.