ಚನ್ನಪಟ್ಟಣ: ವಿದ್ಯಾರ್ಥಿಗಳು ಆತ್ಮವಿಶ್ವಾಸದಿಂದ ವಾರ್ಷಿಕ ಪರೀಕ್ಷೆಗಳನ್ನು ಎದುರಿಸಲು ಸಜ್ಜಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎಂ.ಪಿ. ಮುಲ್ಲೈ ಮುಹಿಲನ್ ಕಿವಿಮಾತು ಹೇಳಿದರು.
ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶುಕ್ರವಾರ ಭೇಟಿ ನೀಡಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿನಿಯರಿಗೆ ಪರೀಕ್ಷೆ ಎದುರಿಸುವ ಬಗ್ಗೆ ಕೆಲವು ಉಪಯುಕ್ತ ಸಲಹೆಗಳನ್ನು ಅವರು ನೀಡಿದರು.
ಪರೀಕ್ಷೆಯ ಬಗ್ಗೆ ಇರುವ ಭಯವನ್ನು ಮೊದಲು ಬಿಡಬೇಕು. ಆತ್ಮವಿಶ್ವಾಸ ಬೆಳೆಸಿಕೊಂಡು ಮುನ್ನಡೆಯಬೇಕು ಎಂದರು.
ಈ ಪರೀಕ್ಷೆಯು ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಉನ್ನತ ಮಟ್ಟದ ಅಂಕ ಸಂಪಾದನೆ ಮಾಡಬೇಕು ಎಂದರು.
ಫಲಿತಾಂಶವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಜಿಲ್ಲೆ ಹಾಗೂ ತಾಲ್ಲೂಕು ಕೇಂದ್ರಗಳ ಉನ್ನತ ಮಟ್ಟದ ಅಧಿಕಾರಿಗಳಿಗೆ ಆಯಾಯ ವ್ಯಾಪ್ತಿಯ ಪ್ರೌಢಶಾಲೆಗಳನ್ನು ದತ್ತು ನೀಡಲಾಗಿದೆ ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಂಗಮಾರೇಗೌಡ ಮಾತನಾಡಿ, ‘ವಿದ್ಯಾರ್ಥಿಗಳಿಗೆ ಪರೀಕ್ಷೆಯ ಬಗ್ಗೆ ಹಿತವಚನ ನೀಡಲು ಸಿಇಒ ಅವರು ಬಂದಿರುವುದು ಶ್ಲಾಘನೀಯ ಕಾರ್ಯ’ ಎಂದರು.
‘ಅವರು ತಾವು ವಿದ್ಯಾರ್ಥಿಯಾಗಿದ್ದಾಗ ಶಿಕ್ಷಣದ ಬಗ್ಗೆ ತೋರಿದ ಆಸಕ್ತಿಯ ಅನುಭವವನ್ನು ಹಂಚಿಕೊಂಡಿದ್ದಾರೆ. ಅವರ ಮಾರ್ಗದರ್ಶನವನ್ನು ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.
ಉಪಪ್ರಾಂಶುಪಾಲ ವೀರಭದ್ರಯ್ಯ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್, ಶಿಕ್ಷಕರು ಹಾಜರಿದ್ದರು.