ಹೊಸನಗರ: ತಾಲ್ಲೂಕಿನ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ನಾಗರಕೊಡಿಗೆ ಡಿ. ಸತ್ಯನಾರಾಯಣ ಜೋಯ್ಸ್(88) ಭಾನುವಾರ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರಿಗೆ ಪತ್ನಿ, ನಾಲ್ವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ಸ್ವಗ್ರಾಮ ನಾಗರಕೊಡಿಗೆಯಲ್ಲಿ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ಸೇರಿ 10ಕ್ಕೂ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರನ್ನು ಹುಟ್ಟು ಹಾಕಿದ ನಾಗರಕೊಡಿಗೆ ಎಂಬ ಪುಟ್ಟ ಗ್ರಾಮದಲ್ಲಿ ನಡೆದ ಸ್ವಾತಂತ್ರ್ಯ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ವಿದ್ಯಾರ್ಥಿಯಾಗಿದ್ದರಿಂದ ಇವರನ್ನು ಬಂಧಿಸಿ ಜೈಲಿಗೆ ಕಳುಹಿಸಿರಲಿಲ್ಲ.
ತ್ರಿಣಿವೆ ವ್ಯವಸಾಯ ಸೇವಾ ಸೊಸೈಟಿ ಸಂಸ್ಥಾಪಕರಲ್ಲೊಬ್ಬರು. ನಾಗರಕೊಡಿಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಮೃತರ ಪಾತ್ರ ಗಮನಾರ್ಹವಾಗಿದೆ.