ಮಂಗಳವಾರ, ಮಾರ್ಚ್ 28, 2023
33 °C
ರೈತರಿಗಾಗಿ ರಾಜ್ಯ ಮಟ್ಟದ ಆನ್‍ಲೈನ್ ವೆಬಿನಾರ್ ಸರಣಿ ಆರಂಭ

‘ಕೃಷಿಯಲ್ಲಿ ತಂತ್ರಜ್ಞಾನ ಬಳಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗದಗ: ‘ಕೃಷಿ ತಂತ್ರಜ್ಞಾನದ ಹೊಸ ಆವಿಷ್ಕಾರಗಳನ್ನು ರೈತರು ತಮ್ಮ ಕೃಷಿ ಪದ್ಧತಿಯಲ್ಲಿ ಅಳವಡಿಕೊಳ್ಳುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು’ ಎಂದು ಭಾರತೀಯ ಕೃಷಿ ಅನುಸಂಧಾನ ಪರಿಷತ್‍ನ ನಿವೃತ್ತ ಮಹಾ ನಿರ್ದೇಶಕ ಡಾ.ಎಸ್.ಅಯ್ಯಪ್ಪನ್ ಹೇಳಿದರು.

‘ರೈತರ ಸರ್ವತೋಮುಖ ಅಭಿವೃದ್ಧಿಗೆ ಕೃಷಿ ವಿಜ್ಞಾನದ ಕೊಡುಗೆ’ ಕುರಿತಾದ ಕೃಷಿ ತಜ್ಞರು ಹಾಗೂ ಯಶಸ್ವಿ ರೈತರ ನಡುವೆ ಸಂವಾದ- ರಾಜ್ಯ ಮಟ್ಟದ ಆನ್‍ಲೈನ್ ವೆಬಿನಾರ್ ಸರಣಿ ಉದ್ಘಾಟಿಸಿ ಅವರು ಮಾತನಾಡಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ. ರಮೇಶ ಬಾಬು ಮಾತನಾಡಿ, ‘ರೈತರಿಗೆ ಹೆಚ್ಚಿನ ತಾಂತ್ರಿಕ ನೆರವು ನೀಡುವ ಉದ್ದೇಶದಿಂದ ರಾಜ್ಯದೆಲ್ಲೆಡೆ ಇರುವ ಕೃಷಿ ಪರಿಕರ ಮಾರಾಟಗಾರರಿಗೆ ಒಂದು ವರ್ಷದ ತರಬೇತಿ ನೀಡುತ್ತಿದ್ದು, ಈ ಯೋಜನೆಯಿಂದ ರೈತರಿಗೆ ಹೆಚ್ಚು ಪ್ರಯೋಜನವಾಗಲಿದೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಸ್ವದೇಶಿ ವಿಜ್ಞಾನ ಅಂದೋಲನದ ರಾಜ್ಯ ಘಟಕದ ಅಧ್ಯಕ್ಷ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ, ‘ವಿವಿಧ ತಾಂತ್ರಿಕ ಸಂಸ್ಥೆಗಳ ನೆರವಿನೊಂದಿಗೆ ಹಮ್ಮಿಕೊಂಡ ಈ ವೆಬಿನಾರ್ ಸರಣಿಯು ರೈತರಿಗೆ ಉಪಯುಕ್ತವಾಗಲಿದೆ. ಜತೆಗೆ ರೈತರ ಆರ್ಥಿಕ ಸ್ಥಿತಿ ಹಾಗೂ ಕೃಷಿಯಲ್ಲಿ ಸುಸ್ಥಿರತೆ ಕಂಡುಕೊಳ್ಳಲು ನೆರವಾಗಲಿದೆ’ ಎಂದು ಅಭಿಪ್ರಾಯಪಟ್ಟರು.

ಈ ಸರಣಿಯು ಪ್ರತಿ ಶನಿವಾರ ಹಾಗೂ ಭಾನುವಾರ ಸಂಜೆ 6ರಿಂದ ರಾತ್ರಿ 8 ಗಂಟೆವರೆಗೆ ನಡೆಯಲಿದ್ದು, ರೈತರು ಇದರ ಸದುಯೋಗ ಪಡೆಯಬೇಕು ಎಂದು ಅವರು ಮನವಿ ಮಾಡಿದರು.

ಸ್ವದೇಶಿ ಆಂದೋಲನ ಕರ್ನಾಟಕ ಪ್ರಧಾನ ಕಾರ್ಯದರ್ಶಿ ಡಾ. ಎಚ್.ರಮೇಶ, ಕಾರ್ಯಾಧ್ಯಕ್ಷ ಡಾ. ಸಿ.ರೇಣುಕಾ ಪ್ರಸಾದ, ಡಾ.ಸಿ.ಎಂ.ರಫಿ, ಡಾ.ಪಿ.ಅಶೋಕ ಸಂಯೋಜಕರಾಗಿ ಕಾರ್ಯನಿರ್ವಹಿಸಿದರು.

ವೆಬಿನಾರ್ ಸರಣಿಯಲ್ಲಿ 150ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.