ಗದಗ: ಜಿಲ್ಲೆಯಲ್ಲಿ ಸುರಿದ ಅತಿಯಾದ ಮಳೆಯಿಂದಾಗಿ ಹಾನಿಗೊಳಗಾದ ಕೃಷಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು.
ಗದಗ ತಾಲ್ಲೂಕಿನ ಹೊಂಬಳ, ಎಚ್.ಎಸ್.ವೆಂಕಟಾಪೂರ ಹಾಗೂ ನರಗುಂದ ತಾಲ್ಲೂಕಿನ ಕುರ್ಲಗೇರಿ ಗ್ರಾಮಗಳಲ್ಲಿ ಮಳೆಯಿಂದಾಗಿ ಹಾನಿಗೊಳಗಾಗಿರುವ ಹೆಸರು ಹಾಗೂ ಉದ್ದು ಬೆಳೆಯನ್ನು ವೀಕ್ಷಿಸಿದರು.
‘ಜಿಲ್ಲೆಯಲ್ಲಿ ಕಟಾವಿಗೆ ಬಂದಿದ್ದ ಹೆಸರು ಬೆಳೆ ಸಂಪೂರ್ಣ ನಾಶವಾಗಿದೆ. ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಹಾನಿಗೊಳಗಾದ ಕೃಷಿ ಪ್ರದೇಶದ ಸಮೀಕ್ಷಾ ಕಾರ್ಯ ನಡೆಸಿ ತಕ್ಷಣವೇ ಪರಿಹಾರ ಒದಗಿಸಲು ಕ್ರಮವಹಿಸಬೇಕು’ ಎಂದು ಸಚಿವ ಬಿ.ಸಿ.ಪಾಟೀಲ ಸೂಚಿಸಿದರು.
‘ಜಿಲ್ಲೆಯಲ್ಲಿ ಈವರೆಗೆ ಒಟ್ಟು 93 ಸಾವಿರ ಹೆಕ್ಟೇರ್ ಕೃಷಿ ಬೆಳೆ ಹಾನಿಗೊಳಗಾಗಿದ್ದು, ಇದರಲ್ಲಿ 73 ಸಾವಿರ ಹೆಕ್ಟೇರ್ ಪ್ರದೇಶದಲ್ಲಿನ ಹೆಸರು ಬೆಳೆಗೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಸಮೀಕ್ಷಾ ಕಾರ್ಯವನ್ನು ನಿಖರವಾಗಿ ಕೈಗೊಳ್ಳಬೇಕು. ಬೆಳೆ ಹಾನಿಯಿಂದ ತೊಂದರೆಗೆ ಒಳಗಾಗಿರುವ ಅರ್ಹ ರೈತರಿಗೆ ಸರ್ಕಾರದ ನಿಯಮಾನುಸಾರ ತುರ್ತಾಗಿ ಪರಿಹಾರ ತಲುಪಿಸಬೇಕು’ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪ್ರಭಾರ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ಪ್ರಭಾರ ಎಡಿಸಿ ಅನ್ನಪೂರ್ಣ ಮುದಕಮ್ಮನವರ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಿಯಾವುಲ್ಲ ಕೆ., ತಹಶೀಲ್ದಾರ್ ಕಿಶನ್ ಕಲಾಲ್, ಕೃಷಿ, ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ರೈತರು ಹಾಜರಿದ್ದರು.