ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಗೆ 50 ಹೊಸ ವೆಂಟಿಲೇಟರ್

5,890 ಎಲ್‌ಪಿಎಂ ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕಗಳ ಮಂಜೂರು
Last Updated 12 ಮೇ 2021, 5:17 IST
ಅಕ್ಷರ ಗಾತ್ರ

ಗದಗ: ‘ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಜಿಮ್ಸ್‌ ಮೇಲೆ ಹೆಚ್ಚಿನ ಒತ್ತಡ ಬೀಳುತ್ತಿದೆ. ಇದನ್ನು ನಿವಾರಿಸುವ ನಿಟ್ಟಿನಲ್ಲಿ ಸರ್ಕಾರ ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ಹೊಸದಾಗಿ 50 ವೆಂಟಿಲೇಟರ್‌ಗಳನ್ನು ಒದಗಿಸಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದರು.

ಮಂಗಳವಾರ ನಗರದ ಜಿಲ್ಲಾಡಳಿತ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿ, ‘ಜಿಲ್ಲಾ ಕೋವಿಡ್‌ ಆಸ್ಪತ್ರೆಯಲ್ಲಿ ಈಗಾಗಲೇ 38 ವೆಂಟಿಲೇಟರ್‌ಗಳಿದ್ದು, ಇವು ಸೋಂಕಿತರ ಚಿಕಿತ್ಸೆಗೆ ಸಾಲುತ್ತಿರಲಿಲ್ಲ. ಈ ಹಿನ್ನಲೆಯಲ್ಲಿ ಹೆಚ್ಚುವರಿ ವೆಂಟಿಲೇಟರ್‌ಗಳಿಗೆ ಬೇಡಿಕೆ ಸಲ್ಲಿಸಲಾಗಿತ್ತು. ಬೇಡಿಕೆ ಸ್ಪಂದಿಸಿರುವ ಸರ್ಕಾರ 50 ವೆಂಟಿಲೇಟರ್‌ಗಳನ್ನು ನೀಡಿದೆ. ಇವುಗಳಲ್ಲಿ 10 ವೆಂಟಿಲೇಟರ್‌ಗಳನ್ನು ಜಿಮ್ಸ್‌ನಲ್ಲಿ ಅಳವಡಿಸಲಾಗಿದೆ. ಉಳಿದವುಗಳ ಅಳವಡಿಕೆ ಕೆಲಸ ಪ್ರಗತಿಯಲ್ಲಿದೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ 200 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‌ ಅನ್ನು ಮೊರಾರ್ಜಿ ವಸತಿ ಶಾಲೆ ಹಾಗೂ ಪಶು ವೈದ್ಯಕೀಯ ಕಾಲೇಜಿನಲ್ಲಿ ಆರಂಭಿಸಲಾಗುವುದು. ಇವು ಶೀಘ್ರದಲ್ಲೇ ಕಾರ್ಯಾರಂಭ ಮಾಡಲಿದ್ದು, ಸೋಂಕಿತರಿಗೆ ಚಿಕಿತ್ಸೆ ಒದಗಿಸಲಿವೆ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಕೋವಿಡ್‌ ಲಸಿಕೆಗಳ ಕೊರತೆ ಇಲ್ಲ. 2,450 ಕೋವ್ಯಾಕ್ಸಿನ್ ಹಾಗೂ 16,500 ಕೋವಿಶೀಲ್ಡ್ ಲಸಿಕೆಗಳು ಲಭ್ಯ ಇವೆ. ಮೇ 11ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದ್ದು, 6,500 ಕೋವಿಶೀಲ್ಡ್ ಲಸಿಕೆಯನ್ನು 18ರಿಂದ 44
ವರ್ಷದೊಳಗಿನವರಿಗೆ ನೀಡಲು ಮೀಸಲಿಟ್ಟಿದೆ. 45 ವರ್ಷ ಮೇಲ್ಪಟ್ಟವರಿಗೆ ಆದ್ಯತೆ ಮೇರೆಗೆ ಎರಡನೇ ಡೋಸ್ ಲಸಿಕೆ ನೀಡುವಂತೆ ಸೂಚಿಸಲಾಗಿದೆ’ ಎಂದು ತಿಳಿಸಿದರು.

‘ಸೋಂಕು ನಿಯಂತ್ರಣಕ್ಕಾಗಿ ಸರ್ಕಾರ 14 ದಿನಗಳ ಕಠಿಣ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ. ಸಾರ್ವಜನಿಕರು ನಿಯಮಗಳನ್ನು ಪಾಲಿಸಬೇಕು. ಅನಗತ್ಯವಾಗಿ ಹೊರಗೆ ಅಡ್ಡಾಡದೇ ಮನೆಯಲ್ಲಿಯೇ ಇರಬೇಕು. ಮಾಸ್ಕ್‌ ಧರಿಸಿ, ಸುರಕ್ಷಿತ ಅಂತರ ಕಾಯ್ದುಕೊಂಡು ಸೋಂಕಿನ ಸರಪಳಿ ತುಂಡರಿಸಲು ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘ಕೋವಿಡ್‌–19 ಲಕ್ಷಣಗಳು ಕಂಡುಬಂದ ತಕ್ಷಣ ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಕೊಳ್ಳಬೇಕು. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಮಾತ್ರ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿಕೊಡಬೇಕು. ಸೋಂಕಿತರು ಮನೆಯಲ್ಲಿ ಕಾಲಹರಣ
ಮಾಡದೇ ಸೂಕ್ತ ಸಮಯಕ್ಕೆ ಚಿಕಿತ್ಸೆ ಪಡೆದು ಜೀವ ಹಾನಿಯಿಂದ ತಪ್ಪಿಸಿಕೊಳ್ಳಬೇಕು’ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಜಿಲ್ಲಾಧಿಕಾರಿ ಎಂ.ಸುಂದರೇಶ್‌ಬಾಬು, ಜಿಲ್ಲಾ ಪಂಚಾಯ್ತಿ ಸಿಇಒ ಭರತ್ ಎಸ್., ಜಿಲ್ಲಾ
ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ಎನ್., ಎಡಿಸಿ ಸತೀಶಕುಮಾರ್ ಎಂ. ಇದ್ದರು.

ಶೀಘ್ರ ಕಾರ್ಯಾರಂಭ

‘ಜಿಲ್ಲೆಗೆ ಅಗತ್ಯವಿರುವಷ್ಟು ಆಮ್ಲಜನಕ ಉತ್ಪಾದಿಸಲು ಅನುಕೂಲವಾಗುವಂತೆ ಒಟ್ಟು 5,890 ಎಲ್‌ಪಿಎಂ ಸಾಮರ್ಥ್ಯದ ಉತ್ಪಾದನಾ ಘಟಕಗಳು ಮಂಜೂರಾಗಿದ್ದು, ಕಾಮಗಾರಿಯನ್ನು ಶೀಘ್ರವೇ ಆರಂಭಿಸಲಾಗುವುದು’ ಎಂದು ಸಚಿವ ಸಿ.ಸಿ.ಪಾಟೀಲ ತಿಳಿಸಿದರು.

‘1000 ಎಲ್‌ಪಿಎಂ ಸಾಮರ್ಥ್ಯದ ಉತ್ಪಾದನಾ ಘಟಕವನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮೆಡಿಕಲ್ ಆಕ್ಸಿಜನ್ ಜನರೇಷನ್ ಪ್ಲಾಂಟ್ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳ ಸಿಎಸ್‌ಆರ್ ಅನುದಾನದಿಂದ ಒದಗಿಸಿದ್ದಾರೆ. ಅದೇ ರೀತಿ, ರಾಜ್ಯ ಸರ್ಕಾರದಿಂದ 3000 ಎಲ್‌ಪಿಎಂ, ಜಿಲ್ಲೆಗೊಂದು ಘಟಕ ಯೋಜನೆಯಡಿ ಜಿಮ್ಸ್‌ನಲ್ಲಿ 1,500 ಎಲ್‌ಪಿಎಂ, ನರಗುಂದ ಆಸ್ಪತ್ರೆಗೆ 390 ಎಲ್‌ಪಿಎಂ ಉತ್ಪಾದನಾ ಘಟಕಗಳು ಮಂಜೂರಾಗಿವೆ’ ಎಂದು ತಿಳಿಸಿದರು.

ಒಟ್ಟು 88 ವೆಂಟಿಲೇಟರ್ ಸೌಲಭ್ಯವುಳ್ಳ ಹಾಸಿಗೆಗಳನ್ನು ಹೊಂದುವ ಮೂಲಕ ಗದಗ ಜಿಲ್ಲಾ ಆಸ್ಪತ್ರೆ ರಾಜ್ಯದಲ್ಲಿಯೇ ಅತಿ ಹೆಚ್ಚು ವೆಂಟಿಲೇಟರ್ ಸೌಲಭ್ಯ ಹೊಂರುವ ಆಸ್ಪತ್ರೆಯಾಗಿ ಮಾರ್ಪಾಟಾಗಿದೆ. ಸಿ.ಸಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT