ಗದಗ/ಲಕ್ಷ್ಮೇಶ್ವರ: ಪಟ್ಟಣದ ಕಿವುಡ ಹಾಗೂ ಮೂಗ ಮಕ್ಕಳ ವಿಶೇಷ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗೆ ಬುಧವಾರ ಕೊರೊನಾ ಸೋಂಕು ದೃಢಪಟ್ಟಿದೆ.
ವಿಜಯಪುರ ಮೂಲದ ಈ ವಿದ್ಯಾರ್ಥಿ ಲಕ್ಷ್ಮೇಶ್ವರದ ಶಾಲೆಯಲ್ಲಿ ಓದುತ್ತಿದ್ದಾನೆ. ಲಾಕ್ಡೌನ್ ಬೆನ್ನಲ್ಲೇ ಊರಿಗೆ ಹೋಗಿದ್ದ ಈತ, ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಜೂ.20ರಂದು ಪಟ್ಟಣಕ್ಕೆ ಮರಳಿ ಬಂದಿದ್ದ. ನಂತರ ವಿದ್ಯಾರ್ಥಿಗೆ ಜ್ವರ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ವಿದ್ಯಾರ್ಥಿಯ ನೇರ ಸಂಪರ್ಕಕ್ಕೆ ಬಂದ ಇಬ್ಬರು ಹಾಗೂ ದ್ವಿತೀಯ ಸಂಪರ್ಕಕ್ಕೆ ಬಂದ 17 ವಿದ್ಯಾರ್ಥಿಗಳನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿದೆ.
‘ಸೋಂಕಿತ ವಿದ್ಯಾರ್ಥಿ ಮತ್ತು ಸಂಪರ್ಕಕ್ಕೆ ಬಂದ ಉಳಿದ ವಿದ್ಯಾರ್ಥಿಗಳಿಗೆ ಮುಂದಿನ ಪೂರಕ ಪರೀಕ್ಷೆಯನ್ನೇ ಪ್ರಥಮ ಪರೀಕ್ಷೆ ಎಂದು ಪರಿಗಣಿಸಿ ಅವಕಾಶ ನೀಡಲಾಗುವುದು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಚ್. ನಾಗೂರ ಹೇಳಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ತನ್ವೀರ್ ಸೇಠ್ ವಿರೋಧ: (ಬೆಂಗಳೂರು ವರದಿ): ‘ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಹಿತದೃಷ್ಟಿಯಿಂದ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸದೆ ಇರುವುದೇ ಉತ್ತಮ’ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಒತ್ತಾಯಿಸಿದ್ದಾರೆ.
ಈ ಸಂಬಂಧ ಅವರು ಮುಖ್ಯಮಂತ್ರಿ ಮತ್ತು ಶಿಕ್ಷಣ ಸಚಿವರಿಗೆ ಪತ್ರ ಬರೆದಿದ್ದು, ‘ಶಿಕ್ಷಣ ಇಲಾಖೆಯ ಶಿಕ್ಷಣ ಕಿರಣ ತಂತ್ರಾಂಶದಲ್ಲಿ ಲಭ್ಯ ಇರುವ ವಿದ್ಯಾರ್ಥಿಗಳ ಮಾಹಿತಿ ಆಧರಿಸಿ ಫಲಿತಾಂಶ ಪ್ರಕಟಿಸಬೇಕು’ ಎಂದು ಆಗ್ರಹಿಸಿದ್ದಾರೆ.