ಲಕ್ಷ್ಮೇಶ್ವರ: ಜಿಲ್ಲಾಧಿಕಾರಿ ಸುಂದರೇಶ ಬಾಬು ಅವರು ಶನಿವಾರ ಪಟ್ಟಣದ ಪುರಸಭೆಯ ಘನತ್ಯಾಜ್ಯ ಘಟಕಕ್ಕೆ ಭೇಟಿ ನೀಡಿ ಕಸ ವಿಲೇವಾರಿ ಕುರಿತು ಮಾಹಿತಿ ಪಡೆದರು.
ನಂತರ ಮಾತನಾಡಿದ ಅವರು, ತ್ಯಾಜ್ಯ ವಿಲೇವಾರಿ ಸ್ಥಳೀಯ ಸಂಸ್ಥೆಗಳ ಬಹು ಮುಖ್ಯ ಜವಾಬ್ದಾರಿ. ಹಸಿ ಕಸ ಮತ್ತು ಒಣ ಕಸ ಬೇರ್ಪಡಿಸಿ ಅವಗಳನ್ನು ವೈಜ್ಞಾನಿಕ ಪದ್ಧತಿಯಲ್ಲಿ ವಿಲೇವಾರಿ ಮಾಡಬೇಕು. ಘನತ್ಯಾಜ್ಯ ಘಟಕದ ಸುತ್ತಲೂ ಇನ್ನೂ ಹೆಚ್ಚಿನ ಗಿಡಮರಗಳನ್ನು ಬೆಳೆಸಬೇಕು ಎಂದರು.
ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ಮಾತನಾಡಿ, ಕಸದಿಂದ ಮರುಬಳಕೆ ತ್ಯಾಜ್ಯವನ್ನು ಬೇರ್ಪಡಿಸಿ ಅವುಗಳನ್ನು ಸ್ಕ್ರ್ಯಾಪ್ ಮಾರಾಟಗಾರರಿಗೆ ಮಾರಾಟ ಮಾಡಲಾಗಿದೆ. ಅಲ್ಲದೆ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಅನೇಕ ಸಿವಿಲ್ ಕಾಮಗಾರಿಗಳನ್ನು ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಯೋಜನಾ ನಿರ್ದೇಶಕ ಎಸ್.ಎನ್. ರುದ್ರೇಶ, ಕಾರ್ಯಪಾಲಕ ಎಂಜಿನಿಯರ್ ಅನಿಲಕುಮಾರ ಮುದ್ದಾ, ಜಿ.ಎನ್. ಗೋನಾಳ, ಪರಿಸರ ಎಂಜಿನಿಯರ್ ಆನಂದ ಬದಿ, ಸಹಾಯಕ ಎಂಜಿನಿಯರ್ ವಿ.ಪಿ. ಕಾಟೇವಾಲೆ ಇದ್ದರು.