ಮುಂಡರಗಿ: ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿ ಸ್ಥಗಿತಗೊಂಡಿರುವ ವಿವಿಧ ಕಾಮಗಾರಿಗಳನ್ನು ಪುನರಾರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಪಟ್ಟಣದ ಸಾರ್ವಜನಿಕ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಗುರುವಾರ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
‘ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯ ಅಡಿಯಲ್ಲಿ 2023ರಲ್ಲಿ ಪುರಸಭೆ ವ್ಯಾಪ್ತಿಯ ವಿವಿಧ ವಾರ್ಡ್ಗಳಲ್ಲಿ ₹ 6.92 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿತ್ತು. ಅದರ ಅಡಿಯಲ್ಲಿ ಪಟ್ಟಣದ ವಿವಿಧ ಭಾಗಗಳಲ್ಲಿ ಅಗತ್ಯ ರಸ್ತೆ ನಿರ್ಮಾಣ, ಚರಂಡಿ ನಿರ್ಮಾಣ ಹಾಗೂ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳಬೇಕಿತ್ತು’ ಎಂದು ತಿಳಿಸಿದರು.
ಪಟ್ಟಣದ ಬಹುತೇಕ ವಾರ್ಡ್ಗಳಲ್ಲಿ ಸುಗಮ ಸಂಚಾರಕ್ಕೆ ಅಗತ್ಯ ರಸ್ತೆ, ಗಲೀಜು ನೀರು ಹರಿದು ಹೋಗಲು ಸೂಕ್ತ ಚರಂಡಿ ಮೊದಲಾದವುಗಳಿಲ್ಲದೇ ಸಾರ್ವಜನಿಕರು ಪರದಾಡುತ್ತಿದ್ದಾರೆ. ಇಲ್ಲಿಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾಮಗಾರಿಗೆ ಚಾಲನೆ ನೀಡಿ ಒಂದು ವರ್ಷ ಗತಿಸಿದ್ದರೂ ಈವರೆಗೂ ಕೆಲವು ಕಾಮಗಾರಿಗಳನ್ನು ಆರಂಭಿಸಿಯೇ ಇಲ್ಲ ಎಂದು ಆರೋಪಿಸಿದರು.
ಆರಂಭದ ದಿನಗಳಲ್ಲಿ ಕೆಲವು ವಾರ್ಡ್ಗಳಲ್ಲಿ ಸಣ್ಣಪುಟ್ಟ ಕಾಮಗಾರಿಗಳನ್ನು ಮಾತ್ರ ಮಾಡಲಾಗಿದ್ದು, ಇನ್ನುಳಿದ ಬಹುತೇಕ ಕಾಮಗಾರಿಗಳು ಅಪೂರ್ಣಗೊಂಡಿವೆ. ಸಂಬಂಧ ಪಟ್ಟ ಗುತ್ತಿಗೆದಾರರು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ತಕ್ಷಣ ಅಪೂರ್ಣಗೊಂಡಿರುವ ಹಾಗೂ ಸ್ಥಗಿತಗೊಂಡಿರುವ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು.
ಈವರೆಗೂ ನಿಗದಿತ ಕಾಮಗಾರಿಯನ್ನು ಆರಂಭಿಸದ ಗುತ್ತಿಗೆದಾರರ ಪರವಾನಗಿ ರದ್ದುಗೊಳಿಸಬೇಕು. ಇಲ್ಲದಿದ್ದರೆ ಪುರಸಭೆ ಆವರಣದಲ್ಲಿ ಸಾರ್ವಜನಿಕರೊಂದಿಗೆ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಾರ್ವಜನಿಕ ಹಿತರಕ್ಷಣಾ ವೇದಿಕೆಯ ಮುಖಂಡ ಅಡಿವೆಪ್ಪ ಚಲುವಾದಿ, ವಿ.ಎಸ್. ಗಟ್ಟಿ, ದೇವಪ್ಪ ಚಿಕ್ಕಣ್ಣವರ, ಹಾಸನ ಅಳವುಂಡಿ, ಅಶೋಕ ಸಬರದ, ವೆಂಕಟೇಶ ಗುಗ್ಗರಿ, ಪರಶುರಾಮ ದೊಡ್ಡಮನಿ, ಗಾಳೆಪ್ಪ ಕೊರವರ, ಮಹಾಂತೇಶ ಬಂಡಿವಡ್ಡರ, ನಿಂಗಪ್ಪ ಚೌಡಕಿ, ಬಸವರಾಜ ಕಪಗಲ್ಲ, ಇಸ್ಮಾಯಿಲ್ ನಧಾಪ್, ರಫಿಕ್ ಮುಲ್ಲಾ, ಪ್ರಕಾಶ ಭಜಂತ್ರಿ, ನಾಗರಾಜ ರಾಮೇನಹಳ್ಳಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.