ನರಗುಂದ: ಇಂದಿನ ರಾಜಕಾರಣ ಸಂಪೂರ್ಣ ಕಲುಷಿತಗೊಂಡಿದೆ. ರಾಜಕಾರಣಿಗಳಿಂದಲೇ ಜಾತಿ ವಿಷ ಬೀಜ ಬಿತ್ತುತ್ತಿರುವುದು ಆತಂಕಕಾರಿ ಬೆಳವಣಿಗೆ ಆಗಿದೆ ಎಂದು ರಾಮದುರ್ಗ ಶಾಸಕ ಅಶೋಕ ಪಟ್ಟಣ ವಿಷಾದ ವ್ಯಕ್ತಪಡಿಸಿದರು.
ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಆಶ್ರಯದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಜಾತಿ ರಾಜಕಾರಣದಿಂದ ರಾಜಕಾರಣಿಗಳಿಗೆ ಬೆಲೆ ಸಿಗುತ್ತಿಲ್ಲ. ಜನರ ಕಣ್ಣಿಗೆ ನಾವು ಕಳ್ಳರಂತೆ ಕಾಣಿಸುವಂತಾಗಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಇದಕ್ಕೆ ಕಾರಣವಾಗಿದೆ. ಎರಡು ದಶಕ ಕಳೆದರೆ ರಾಜಕೀಯ ಅರಾಜಕತೆ ಉಂಟಾಗಿ ಜಾತಿ ಕಲಹದಿಂದ ರಸ್ತೆಯಲ್ಲಿ ಸಾವು ನೋಡುವಂತಾಗುತ್ತದೆ ಎಂದರು.
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಶಾಸಕ ಮಹೇಶ್ ಟೆಂಗಿನಕಾಯಿ ಮಾತನಾಡಿ, ಮಕ್ಕಳಿಗೆ ಒತ್ತಡದ ಅಭ್ಯಾಸ, ಗುರಿ ಹೇರದೇ ಅವರ ಆಸಕ್ತಿಗೆ ಅನುಗುಣವಾಗಿ ಪ್ರೇರೇಪಿಸಬೇಕು. ಬಣಜಿಗ ಸಮಾಜದ ಪ್ರತಿಭೆಗಳನ್ನು ಪ್ರೋತ್ಸಾಹಿಸಬೇಕು ಎಂದರು.
ವಿರಕ್ತಮಠದ ಶಿವಕುಮಾರ ಸ್ವಾಮೀಜಿ ಮಾತನಾಡಿದರು. ತಾಲ್ಲೂಕು ಘಟಕದ ಅಧ್ಯಕ್ಷ ಶಿವಾನಂದ ಶೇಬಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಬಣಜಿಗ ಸಂಘದ ಸಂಸ್ಥಾಪಕ ಕಾರ್ಯದರ್ಶಿ ಗವಿಸಿದ್ದಪ್ಪ ಕೊಪ್ಪಳ, ಗದಗ ಜಿಲ್ಲಾ ಅಧ್ಯಕ್ಷ ಈಶಣ್ಣ ಮುನವಳ್ಳಿ, ಶಿವಾನಂದ ನಿಂಗನೂರ, ನವಲಗುಂದ. ತಾಲ್ಲೂಕು ಘಟಕದ ಅಧ್ಯಕ್ಷ ಅಣ್ಣಪ್ಪ ಬಾಗಿ, ನರಗುಂದ ಘಟಕದ ಸಂಸ್ಥಾಪಕ ಅಧ್ಯಕ್ಷ ಎಸ್.ವಿ. ಗೋವೇಶ್ವರ, ನಿವೃತ್ತ ಕನ್ನಡ ಉಪನ್ಯಾಸಕ ಎಂ.ಎಸ್. ಯಾವಗಲ, ಲೀಲಕ್ಕ ಹಸಬಿ, ಚನ್ನಪ್ಪ ನಂದಿ, ಬಸವರಾಜ ಪಟ್ಟಣಶೆಟ್ಟಿ ಇದ್ದರು. ಸುಭಾಷ್ ಕೋತೀನ ಸ್ವಾಗತಿಸಿದರು. ಆರ್.ಬಿ.ಚಿನಿವಾಲರ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.