ಗದಗ: ‘ವಿರೋಧ ಪಕ್ಷದ ನಾಯಕನ ಆಯ್ಕೆ ವಿಳಂಬ ಬಿಜೆಪಿಯ ಆಂತರಿಕ ವಿಚಾರ. ಆದರೆ, ವಿಧಾನಸಭಾ ಚುನಾವಣೆಯಲ್ಲಿ ಆದ ಸೋಲಿನಿಂದ ಅವರಲ್ಲಿ ನೈತಿಕ ಸ್ಥೈರ್ಯ ಕುಸಿದಿದೆ. ಬಿಜೆಪಿಯಲ್ಲಿ ಉತ್ಸಾಹ ಕಮರಿದೆ’ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ ಕುಟುಕಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆ ಸೋಲಿನಿಂದ ವಿರೋಧ ಪಕ್ಷದ ನಾಯಕ ಆಯ್ಕೆ ನಿರ್ಣಯ ತೆಗೆದುಕೊಳ್ಳುವಲ್ಲಿ ಅವರಿಗೆ ಸಾಧ್ಯವಾಗುತ್ತಿಲ್ಲ. ಕಾಂಗ್ರೆಸ್ ತೊರೆದು ಹೋದ 17 ಮಂದಿಯಲ್ಲಿ ಒಬ್ಬರನ್ನು ವಿರೋಧ ಪಕ್ಷದ ನಾಯಕನನ್ನಾಗಿ ಮಾಡಲಿ. ಇನ್ನು ಮುಂದೆ ಇಲ್ಲಿಂದ ಯಾರೂ ಬಿಜೆಪಿಗೆ ಹೋಗುವವರಿಲ್ಲ’ ಎಂದು ಲೇವಡಿ ಮಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಜಿಎಸ್ಟಿ ಬದಲಾಗಿ ‘ವೈಎಸ್ಟಿ’ (ಯತೀಂದ್ರ, ಸಿದ್ದರಾಮಯ್ಯ ಟ್ಯಾಕ್ಸ್) ಶುರುವಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಅದು ಅವರ ತಪ್ಪುಗ್ರಹಿಕೆ. ಯಾವುದೇ ತಪ್ಪು ಕೆಲಸಗಳು ನಮ್ಮ ಸರ್ಕಾರದಲ್ಲಿ ನಡೆದಿಲ್ಲ. ಕುಮಾರಸ್ವಾಮಿ ಅವರು ಕೇವಲ ಪ್ರಚಾರಕ್ಕಾಗಿ ಈ ರೀತಿಯ ಆರೋಪ ಮಾಡುತ್ತಿದ್ದಾರೆ’ ಎಂದು ಹರಿಹಾಯ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.