ಗದಗ: ರಾಜ್ಯಸ್ವ ಸಂಗ್ರಹ ಹೆಚ್ಚಿಸುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ.ಪಾಟೀಲ ಸೂಚಿಸಿದರು.
ನರಗುಂದ ಗೃಹ ಕಚೇರಿಯಿಂದ ನಡೆಸಿದ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗಿನ ವಿಡಿಯೊ ಸಂವಾದದಲ್ಲಿ ಅವರು ಮಾತನಾಡಿದರು.
ಕಾರ್ಯಾನುಮತಿ ಪಡೆದು ಪಟ್ಟಾ ಜಮೀನಿನಲ್ಲಿ ಗ್ರಾನೈಟ್ ಗಣಿಗಾರಿಕೆ ನಡೆಸುತ್ತಿರುವವರು ಕಡ್ಡಾಯವಾಗಿ ಪರವಾನಗಿ ಪಡೆದು ಸರ್ಕಾರಕ್ಕೆ ನಿಯಮಾನುಸಾರ ರಾಜಸ್ವ ಪಾವತಿಸಲು ಸ್ಥಳೀಯ ಅಧಿಕಾರಿಗಳು ನಿಗಾವಹಿಸಬೇಕು ಎಂದು ಸಚಿವರು ತಿಳಿಸಿದರು.
ನೂತನ ಮರಳು ನೀತಿ ಜಾರಿಗೆ ತರುವ ಕುರಿತು ಅಗತ್ಯದ ಸಿದ್ಧತೆಗಳನ್ನು ಮಾಡಿಕೊಳ್ಳುವುದರ ಜತೆಗೆ ಖನಿಜ ರಕ್ಷಣಾ ಪಡೆ ರಚಿಸಲು ಕ್ರಮ ಕೈಗೊಳ್ಳಬೇಕು. ಅಂತರರಾಜ್ಯಗಳಿಂದ ಬರುವ ಉಪ ಖನಿಜಕ್ಕೆ ನಿಯಂತ್ರಣ ಶುಲ್ಕ ಸಂಗ್ರಹಿಸಲು ಸ್ಥಾಪಿಸಲಾದ ಚೆಕ್ ಪೋಸ್ಟ್ಗಳನ್ನು ಬಲಪಡಿಸಿ, ಕಟ್ಟುನಿಟ್ಟಾಗಿ ವಾಹನಗಳ ತಪಾಸಣೆ ನಡೆಸಬೇಕು. ಜನ ಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ, ಇಲಾಖೆ ನಿರ್ದೇಶಕ ಡಿ.ಎಸ್.ರಮೇಶ, ಸಚಿವರ ಆಪ್ತ ಕಾರ್ಯದರ್ಶಿ ಕೆ.ಸಿ.ವಿರೂಪಾಕ್ಷ, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.