ಶಿರಹಟ್ಟಿ: ‘ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳೊಂದಿಗೆ ಪೈಪೋಟಿ ನಡೆಸಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಇದಕ್ಕೆ ಬೇಕಾಗುವಂತಹ ಸೌಲಭ್ಯಗಳನ್ನು ಒದಗಿಸಲಾಗುವುದು’ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.
ಪಟ್ಟಣದಲ್ಲಿ ₹ 50 ಲಕ್ಷ ವೆಚ್ಚದಲ್ಲಿ ಮೌಲಾನಾ ಅಬುಲ್ ಕಲಾಂ ಆಜಾದ್ ಶಾಲಾ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ‘ಅಲ್ಪಸಂಖ್ಯಾತರ ಮತ್ತು ಹಿಂದುಳಿದ ಸಮುದಾಯಗಳ ಶೈಕ್ಷಣಿಕವಾಗಿ ಅಭಿವೃದ್ಧಿ ಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಶಿಕ್ಷಣ ಪ್ರೇಮಿಗಳಾದ ರಿಯಾಜ್ ಅಹ್ಮದ ಢಾಲಾಯತ್ ಅವರು ಶಾಲಾ ಕಟ್ಟಡ ನಿರ್ಮಾಣಕ್ಕೆ 20 ಗುಂಟೆ ಭೂಮಿ ದಾನವಾಗಿ ನೀಡದ್ದು ಶ್ಲಾಘನೀಯ. ಇಂತಹ ವ್ಯಕ್ತಿಗಳಿಂದ ಮಾತ್ರ ಅಭಿವೃದ್ಧಿ ಕೆಲಸಗಳು ಸಾಧ್ಯ’ ಎಂದರು.
ಮಾಜಿ ಸಂಸದ ಪ್ರೊ.ಐ.ಜಿ.ಸನದಿ ಮಾತನಾಡಿ, ‘ಜಗತ್ತಿನಲ್ಲಿ ಅತ್ಯಂತ ಪವಿತ್ರವಾದದ್ದು ಜ್ಞಾನ. ಸುಸಜ್ಜಿತವಾದ ಕಟ್ಟಡದ ಜೊತೆಗೆ ಇಲ್ಲಿ ಶೈಕ್ಷಣಿಕ ಪರಿಸರವನ್ನು ರೂಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಸಲಹೆ ನೀಡಿದರು.
ಭೂದಾನಿ ರಿಯಾಜ್ಅಹ್ಮದ ಢಾಲಾಯತ್ ಅವರನ್ನು ಸನ್ಮಾನಿಸಲಾಯಿತು.