ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತಂಗಡಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು

ಗದಗ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ್‌ ಅಕ್ಕಿ ಹೇಳಿಕೆ
Published 30 ಮಾರ್ಚ್ 2024, 16:07 IST
Last Updated 30 ಮಾರ್ಚ್ 2024, 16:07 IST
ಅಕ್ಷರ ಗಾತ್ರ

ಗದಗ: ಯುವಜನರು ಮೋದಿ ಹೆಸರು ಹೇಳಿದರೆ ಅವರಿಗೆ ಕಪಾಳಮೋಕ್ಷ ಮಾಡಿ ಎಂದು ಹೇಳಿರುವ ಸಚಿವ ಶಿವರಾಜ ತಂಗಡಗಿ ವಿರುದ್ಧ ಪ್ರಕರಣ ದಾಖಲಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಬಿಜೆಪಿ ಗದಗ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಸಂತೋಷ್‌ ಅಕ್ಕಿ ಹಾಗೂ ಬಿಜೆಪಿ ಮುಖಂಡ ಶಶಿಧರ ದಿಂಡೂರ ತಿಳಿಸಿದರು.

ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶಿವರಾಜ ತಂಗಡಗಿ ಅವರ ಈ ಹೇಳಿಕೆ ಸ್ಪಷ್ಟವಾಗಿ ನೀತಿ ಸಂಹಿತೆಯ ಉಲ್ಲಂಘನೆ ಆಗಿದೆ. ಪ್ರಚೋದನಾಕಾರಿ ಹೇಳಿಕೆ ನೀಡಿರುವ ಅವರ ವಿರುದ್ಧ ಕೂಡಲೇ ಎಫ್‌ಐಆರ್‌ ದಾಖಲಿಸಬೇಕು. ಚುನಾವಣಾ ಪ್ರಚಾರದಲ್ಲಿ ಭಾಗವಹಿಸದಂತೆ ಅವರಿಗೆ ನಿರ್ಬಂಧ ಹೇರಬೇಕು ಎಂದು ಚುನಾವಣಾ ಆಯೋಗವನ್ನು ಒತ್ತಾಯಿಸಲಾಗುವುದು’ ಎಂದು ತಿಳಿಸಿದರು.

‘ಮೋದಿ ಅವರನ್ನು ಯುವಜನರ ಆರಾಧಿಸುತ್ತಾರೆ. ಮೊದಲ ಬಾರಿಗೆ ಮತದಾನ ಮಾಡುವ ಯುವಜನರು ಮೋದಿ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿದ್ದಾರೆ. ಆದರೆ, ಅವರ ಜನಪ್ರಿಯತೆಯನ್ನು ಸಹಿಸದ ಸಚಿವ ಶಿವರಾಜ ತಂಡಗಡಿ ಅವರು ಈ ರೀತಿ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ. ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸುಮ್ಮನಿದ್ದೇವೆ. ಇಲ್ಲದಿದ್ದರೆ ಅವರಿಗೆ ತಕ್ಕ ಉತ್ತರ ನೀಡುತ್ತಿದ್ದೆವು’ ಎಂದು ಹರಿಹಾಯ್ದರು.

‘ಸಚಿವ ಶಿವರಾಜ ತಂಗಡಿ ಅವರು ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿ ಯುವಜನರಿಗೆ ಮೋಸ ಮಾಡಿದ್ದಾರೆ ಎಂದು ಹೇಳಿದ್ದಾರೆ. ಆದರೆ, ಅವರಿಗೆ ಮಾಹಿತಿ ಕೊರತೆ ಕಾರಣದಿಂದ ಈ ರೀತಿ ಹೇಳಿದ್ದಾರೆ. ಯುವಜನರ ಕೌಶಲ ಹೆಚ್ಚಳ ಹಾಗೂ ಉದ್ಯೋಗ ಸೃಷ್ಟಿಗಾಗಿ ವಿವಿಧ ಯೋಜನೆಗಳನ್ನು ರೂಪಿಸಿ, ಎರಡು ಅವಧಿಯಲ್ಲಿ ಲಕ್ಷಾಂತರ ಮಂದಿ ಯುವಕರಿಗೆ ಉದ್ಯೋಗ ನೀಡಿದ್ದಾರೆ’ ಎಂದು ಸಮರ್ಥನೆ ಮಾಡಿಕೊಂಡರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು ಬಿಜೆಪಿ ನಾಯಕ ಅಮಿತ್‌ ಶಾ ಅವರ ಬಗ್ಗೆ ಅಪಮಾನಕರ ಮಾತುಗಳನ್ನು ಆಡಿದ್ದಾರೆ. ಅವರು ಈ ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

ಸಚಿವ ಎಚ್‌.ಕೆ. ಪಾಟೀಲ ಅವರು ರಾಜ್ಯದ ಹಿರಿಯ ನಾಯಕರು. ಯುವಜನರಿಗೆ ಮಾದರಿ ಆಗಿರುವವರು. ಆದರೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಗ್ಗೆ ಹಗುರವಾಗಿ ಮಾತನಾಡಿದ್ದು ಸರಿಯಲ್ಲ. ಅವರ ವಯಸ್ಸು, ಸ್ಥಾನ ಅರಿತುಕೊಂಡು ಮಾತನಾಡಬೇಕು ಎಂದು ಆಗ್ರಹಿಸಿದರು.

ಗದಗ ಶಹರ ಬಿಜೆಪಿ ಅಧ್ಯಕ್ಷ ಅನಿಲ ಅಬ್ಬಿಗೇರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಫಕ್ಕಿರೇಶ್ ರಟ್ಟಿಹಳ್ಳಿ, ಮಂಡಲ ಅಧ್ಯಕ್ಷ ದತ್ತಣ್ಣ ಜೋಶಿ, ಎಸ್‍ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ ಶಿವಪ್ಪ ಮುಳಗುಂದ, ಕೆ.ಪಿ. ಕೋಟಿಗೌಡರ, ರಮೇಶ ಸಜ್ಜಗಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT