ಮುಂಡರಗಿ: ‘ಸಂವಿಧಾನವನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲ ಮತದಾರರು ತಪ್ಪದೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಬೇಕು’ ಎಂದು ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ವೈ.ಎನ್.ಗೌಡರ ಮನವಿ ಮಾಡಿದರು.
ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಅವರ ಪರವಾಗಿ ಶನಿವಾರ ತಾಲ್ಲೂಕಿನ ಹೆಸರೂರು, ಕಕ್ಕೂರು, ಕಕ್ಕೂರುತಾಂಡಾ, ಕೊರ್ಲಹಳ್ಳಿ ಮೊದಲಾದ ಭಾಗಗಳಲ್ಲಿ ಮತಯಾಚಿಸಿ ಅವರು ಮಾತನಾಡಿದರು.
‘ಬಿಜೆಪಿ ಹಾಗೂ ಜೆಡಿಎಸ್ನ ಕೆಲವು ನಾಯಕರು ನಮ್ಮ ಹೆಣ್ಣುಮಕ್ಕಳ ಕುರಿತು ತುಂಬಾ ಹಗುರವಾಗಿ ಮಾತನಾಡುತ್ತಿದ್ದು, ಅವರು ಮೊದಲು ತಮ್ಮ ತಟ್ಟೆಯಲ್ಲಿ ಬಿದ್ದಿರುವ ನೊಣ ನೋಡಿಕೊಳ್ಳಲಿ. ನಂತರ ಬೇರೆ ಹೆಣ್ಣುಮಕ್ಕಳ ಕುರಿತು ಮಾತನಾಡಲಿ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ರಾಜ್ಯಕ್ಕೆ ಬರ ಪರಿಹಾರ ನೀಡದೆ ನಮ್ಮ ರೈತರನ್ನು ಸತಾಯಿಸಿದೆ’ ಎಂದು ಆರೋಪಿಸಿದರು.
ಕೆಪಿಸಿಸಿ ಕಾರ್ಯದರ್ಶಿ ಎಸ್.ಡಿ.ಮಕಾಂದಾರ ಮಾತನಾಡಿ, ‘ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಜನತೆಗೆ ನೀಡಿದ್ದ ಭರವಸೆಗಳನ್ನೆಲ್ಲ ಈಡೇರಿಸಿದೆ. ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಎಲ್ಲ ಗ್ಯಾರಂಟಿ ಯೋಜನೆಗಳು ಜನಪ್ರಿಯವಾಗಿದ್ದು, ಈ ಚುನಾವಣೆಯಲ್ಲಿ ರಾಜ್ಯದ ಜನತೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಹಿಂದುಳಿದ ವರ್ಗಗಳ ಕಾಂಗ್ರೆಸ್ ಕಾರ್ಯದರ್ಶಿ ರುದ್ರಗೌಡ ಪಾಟೀಲ ಮಾತನಾಡಿ, ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಸಜ್ಜನ ಯುವಕನಾಗಿದ್ದು, ಗೆದ್ದು ಈ ಭಾಗದ ಸಮಸ್ಯೆಗಳನ್ನು ನಿವಾರಿಸಲಿದ್ದಾರೆ. ಆದ್ದರಿಂದ ಎಲ್ಲ ಮತದಾರರು ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಬೇಕು’ ಎಂದು ತಿಳಿಸಿದರು. ನಂತರ ಎಲ್ಲ ಕಾರ್ಯಕರ್ತರು ಮನೆ ಮನೆಗಳಿಗೆ ತೆರಳಿ ಮತಯಾಚಿಸಿದರು.
ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹೇಮಂತಗೌಡ ಪಾಟೀಲ, ರಾಮು ಕಲಾಲ, ಮುಖಂಡರಾದ ಮದರಸಾಬ್ ಸಿಂಗನಮಲ್ಲಿ, ಇಬ್ರಾಹಿಂ ಸಾಬಣ್ಣವರ, ರಾಜು ಡಾವಣಗೇರಿ, ನಿಜಲಿಂಗಪ್ಪ ಜುಟ್ಲಣ್ಣವರ, ವಿನೋದ ವಡ್ಡರ, ಕಾಳಮ್ಮ ಕಮ್ಮಾರ, ಎಲ್ಲಮ್ಮ ಶೀರನಹಳ್ಳಿ ಸೇರಿದಂತೆ ಅನೇಕರು ಇದ್ದರು.