ಮುಂಡರಗಿ: ಹಿಂದಿನ ನಾಲ್ಕು ಬೇಸಿಗೆಗೆ ಹೋಲಿಸಿದರೆ ಈ ಬಾರಿ ತಾಲ್ಲೂಕಿನಲ್ಲಿ ಜನರಿಗೆ ನೀರಿನ ಬವಣೆ ಅಷ್ಟಾಗಿ ತಟ್ಟಿಲ್ಲ. ತಾಲ್ಲೂಕಿನ ಡಂಬಳ ಹೋಬಳಿಯ ಚಿಕ್ಕವಡ್ಡಟ್ಟಿ, ಹಳ್ಳಿಗುಡಿ, ಹಳ್ಳಿಕೇರಿ, ಪೇಠಾಲೂರು, ಜಂತ್ಲಿ, ಶಿರೂರ, ಮುರುಡಿ, ಹಿರೇವಡ್ಡಟ್ಟಿ, ಗುಡ್ಡದಬೂದಿಹಾಳ ಮೊದಲಾದ ಗ್ರಾಮಗಳಲ್ಲಿ ನೀರಿನ ಕಳೆದೊಂದು ದಶಕದಿಂದ ನೀರಿನ ಹಾಹಾಕಾರ ತೀವ್ರವಾಗಿತ್ತು.
ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಈಗ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯನಿರ್ವಹಿಸುತ್ತಿವೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆ (ಡಿಬಿಒಟಿ) ಸೇರಿದಂತೆ ತಾಲ್ಲೂಕಿನ ಗ್ರಾಮೀಣ ಭಾಗಗಳ ಜನತೆಗೆ ವಿವಿಧ ಮೂಲಗಳಿಂದ ನೀರು ಪೂರೈಸಲಾಗುತ್ತಿದೆ. ತಾಲ್ಲೂಕಿನ ಹಮ್ಮಿಗಿ ಗ್ರಾಮದ ಸಿಂಗಟಾಲೂರ ಏತ ನೀರಾವರಿ ಯೋಜನೆಯ ಘಟಕದಿಂದ ಜಿಲ್ಲೆಯ ಕೆಲವು ಗ್ರಾಮಗಳಿಗೆ ಶುದ್ಧ ಕುಡಿಯುವ ನೀರು ಪೂರೈಸಲು ₹ 1049 ಕೋಟಿ ವೆಚ್ಚದ ಶುದ್ಧ ಕುಡಿಯುವ ನೀರು ಪೂರೈಕೆ ಯೋಜನೆ ಕಾರ್ಯಾರಂಭ ಮಾಡಿದೆ.
ಸಿಂಗಟಾಲೂರ ಏತ ನೀರಾವರಿ ಯೋಜನೆಯ ಬೃಹತ್ ಕಾಲುವೆಗಳ ಮೂಲಕ ಮಳೆಗಾಲದಲ್ಲಿ ತಾಲ್ಲೂಕಿನ ಬಸಾಪೂರ, ತಾಂಬ್ರಗುಂಡಿ, ಡಂಬಳ, ಗದಗ ಮೊದಲಾದ ದೊಡ್ಡ ಕೆರೆಗಳಿಗೆ ನೀರು ತುಂಬಿಸಲಾಗಿದೆ. ಇದರಿಂದಾಗಿ ಗ್ರಾಮೀಣ ಭಾಗಗಳ ಜಾನುವಾರುಗಳಿಗೆ ಮತ್ತು ಜನರ ಬಳಕೆಗೆ ನೀರಿನ ಕೊರತೆ ದೊಡ್ಡ ಮಟ್ಟದಲ್ಲಿ ಎದುರಾಗಿಲ್ಲ.
ಈ ಬಾರಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗಬಾರದು ಎಂದು ಮುಂಜಾಗ್ರತಾ ಕ್ರಮವಾಗಿ ತಾಲ್ಲೂಕು ಮತ್ತು ಜಿಲ್ಲಾಡಳಿತ ಸಿಂಗಟಾಲೂರ ಏತ ನೀರಾವರಿ ಯೋಜನೆಯ ಬ್ಯಾರೇಜ್ನಲ್ಲಿ ಸಾಕಷ್ಟು ನೀರು ಸಂಗ್ರಹಿಸಿತ್ತು. ಫೆಬ್ರುವರಿಯಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿರುವ ಸೂಚನೆ ಕಂಡು ಬಂತು. ಆ ವೇಳೆಗೆ ಸಿಂಗಟಾಲೂರ ವೀರಭದ್ರೇಶ್ವರ ಜಾತ್ರೆ ಇದ್ದುದ್ದರಿಂದ ಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ಹರಿಸಿ, ಬ್ಯಾರೇಜ್ ಭರ್ತಿ ಮಾಡಲಾಗಿತ್ತು. ಈಗಲೂ ಬ್ಯಾರೇಜಿನಲ್ಲಿ ಸಾಕಷ್ಟು ನೀರು ಸಂಗ್ರಹವಿದ್ದು, ಮಳೆ ಆರಂಭಕ್ಕೂ ಮುನ್ನವೇ, ಅಗತ್ಯ ಬಿದ್ದರೆ ಮತ್ತ ಭದ್ರಾ ಜಲಾಶಯದಿಂದ ಹಚ್ಚವರಿ ನೀರು ಪಡೆದುಕೊಳ್ಳಲು ಜಿಲ್ಲಾಡಳಿತಕ್ಕೆ ಅವಕಾಶವಿದೆ.
ಸಿಂಗಟಾಲೂರ ಏತ ನೀರಾವರಿ ಯೋಜನೆಯ ಬ್ಯಾರೇಜಿನಿಂದ ನದಿಗೆ ನೀರು ಬಿಡುತ್ತಿರುವುದರಿಂದ, ಈ ಬ್ಯಾರೇಜ್ನ ಕೆಳಭಾಗದ ಗ್ರಾಮಗಳಾದ ಹಮ್ಮಿಗಿ, ಸಿಂಗಟಾಲೂರ, ಶೀರನಹಳ್ಳಿ, ಗಂಗಾಪೂರ, ಕೊರ್ಲಹಳ್ಳಿ, ಕಕ್ಕೂರು, ಹೆಸರೂರು ಮೊದಲಾದ ಗ್ರಾಮಗಳಲ್ಲಿ ಜನ ಹಾಗೂ ಜಾನುವಾರುಗಳಿಗೆ ನೀರಿನ ಸಮಸ್ಯೆ ಎದುರಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.