ಗದಗ: ಕಳೆದ 15 ದಿನಗಳಿಂದ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ಆರೋಪಿಸಿ ಸೆಟ್ಲ್ಮೆಂಟ್ನ ಗಾಂಧಿನಗರದ ನಾಗರಿಕರು ಶುಕ್ರವಾರ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.
ರೈಲ್ವೆ ಮೇಲು ಸೇತುವೆ ಬಳಿ ಖಾಲಿ ಕೊಡಗಳನ್ನು ಹಿಡಿದು ರಸ್ತೆ ತಡೆ ನಡೆಸಿದರು. ಪ್ರತಿಭಟನೆ ತೀವ್ರಗೊಂಡ ಪರಿಣಾಮ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರ ಮನವೊಲಿಸಲು ಪ್ರಯತ್ನ ನಡೆಸಿದರು. ಆದರೆ ಪ್ರತಿಭಟನಾಕಾರರು ಇದಕ್ಕೆ ಮಣಿಯಲಿಲ್ಲ.
ಬಳಿಕ ನಗರಸಭೆಗೆ ಮುತ್ತಿಗೆ ಹಾಕಿದರು. ಸೆಟ್ಲಮೆಂಟ್ ಭಾಗವು ಮೂಲ ಸೌಕರ್ಯದಿಂದ ವಂಚಿತವಾಗಿದೆ. ನಗರಸಭೆ ಆಡಳಿತಕ್ಕೆ ಸೌಲಭ್ಯ ಕಲ್ಪಿಸಬೇಕೆನ್ನುವ ಕನಿಷ್ಠ ಕಾಳಜಿ ಕೂಡ ಇಲ್ಲ. ಸಂಬಂಧಿಸಿದ ವಾರ್ಡ್ನ ಸದಸ್ಯರಿಗೆ ಹೇಳಿಕೊಂಡರು ಯಾವುದೇ ಪ್ರಯೋಜನವಾಗಲಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.