ಗದಗ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ನ ಕೆಲಸ ಕಾರ್ಯಗಳಿಗೆ 30 ಗುಂಟೆ ಜಾಗವನ್ನು ಸರ್ಕಾರದ ವತಿಯಿಂದ ಮಂಜೂರು ಮಾಡಲಾಗಿದೆ ಎಂದು ಶಾಸಕ ಶ್ರೀಶೈಲಪ್ಪ ಬಿದರೂರ ಹೇಳಿದರು.
ನಗರದಲ್ಲಿ ಭಾನುವಾರ ನಡೆದ ಲಿಂಗಾಯತ ಪಂಚಮಸಾಲಿ ಟ್ರಸ್ಟ್ನ ಬೆಟಗೇರಿ ಘಟಕದ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಸರ್ಕಾರ ನೀಡುವ ಜಾಗವನ್ನು ಒಳ್ಳೆಯ ಕೆಲಸಗಳಿಗೆ ಸದುಪಯೋಗ ಪಡಿಸಿಕೊಳ್ಳ ಬೇಕು. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ಸಂಘಟನೆ ಮಾಡುವ ಮೂಲಕ ಸಮಾಜದ ಪ್ರಗತಿಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಸಾನಿಧ್ಯ ವಹಿಸಿದ್ದ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಸಮಾಜದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ರಾಜಕೀಯ ಮತ್ತು ಸಾಮಾಜಿಕ ಶಕ್ತಿ ಇದ್ದರೆ ಮಾತ್ರ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯ. ಪಂಚಮಸಾಲಿಗಳು ಜಾತಿವಾದಿಗಳಲ್ಲ, ಸಮಾಜವಾದಿಗಳು. ಕೃಷಿ ಕಾಯಕ ಮಾಡಿಕೊಂಡು ಎಲ್ಲರನ್ನು ಪ್ರೀತಿಯಿಂದ ಕಾಣುತ್ತಾರೆ ಎಂದು ಹೇಳಿದರು.
ರಾಷ್ಟ್ರೀಯ ಅಧ್ಯಕ್ಷ ಪ್ರಭಣ್ಣ ಹುಣಸಿಕಟ್ಟೆ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಎಸ್.ಬಿ.ಸಂಕಣ್ಣವರ, ಎಂ.ಎಸ್.ಮಲ್ಲಾಪುರ, ನಾಗಪ್ಪ ಬಸಪ್ಪ, ಎಂ.ಬಸಪ್ಪ, ಮರಿಗೌಡರ, ಸಿ.ಆರ್. ಅಂಗಡಿ, ಎಂ.ಎಸ್.ಪಾಟೀಲ ಮತ್ತಿತ ರರು ಭಾಗವಹಿಸಿದ್ದರು