ಗದಗ: ಜಿಲ್ಲೆಯ ಮುಂಡರಗಿ ತಾಲ್ಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿ ಮುಂಡರಗಿ ತಾಲ್ಲೂಕು ಪ್ರಗತಿಪರ ಸಂಘಟನೆ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮುಖಂಡ ವೈ.ಎನ್.ಗೌಡರ ನೇತೃತ್ವದಲ್ಲಿ ಜಮಾವಣೆಗೊಂಡ ರೈತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಸರ್ಕಾರ 98 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ. ಜಿಲ್ಲೆಯ ರೋಣ ಮತ್ತು ನರಗುಂದ ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ಪಟ್ಟಿಗೆ ಸೇರಿಸಿದೆ. ಆದರೆ ಅತಿ ಹಿಂದುಳಿದ ತಾಲ್ಲೂಕಗಳಲ್ಲಿ ಒಂದಾಗಿರುವ ಮುಂಡರಗಿಯನ್ನು ಪಟ್ಟಿಯಿಂದ ಕೈ ಬಿಡಲಾಗಿದೆ. ಮುಂಡರಗಿಯಲ್ಲಿ ಹಿಂಗಾರು, ಮುಂಗಾರು ಎರಡು ಕೈ ಕೊಟ್ಟಿದ್ದರಿಂದ ರೈತರು ಬಿತ್ತಿದ ಬೆಳೆಗಳು ಸಂಪೂರ್ಣ ಹಾನಿಯಾಗಿದೆ. ರೈತರು ಹಾಗೂ ಕೂಲಿ ಕಾರ್ಮಿಕರು ತೊಂದರೆಯಲ್ಲಿ ಇದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬರ ಪೀಡಿತ ತಾಲ್ಲೂಕು ಘೋಷಣೆ ಮಾಡದಿರುವುದಕ್ಕೆ ಪ್ರತಿಭಟನಾಕಾರರು ಆಕ್ರೋ ಶ ವ್ಯಕ್ತಪಡಿಸಿದರು.
ಕೂಡಲೇ ಮುಂಡರಗಿ ತಾಲ್ಲೂಕು ಅನ್ನು ಬರಪೀಡಿತ ಪಟ್ಟಿಗೆ ಸೇರಿಸಿ ಸೂಕ್ತ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಸರ್ಕಾರ ಹದಿನೈದು ದಿನದಲ್ಲಿ ಘೋಷಣೆ ಮಾಡದಿದ್ದಲ್ಲಿ ಅಸಹಕಾರ ಚಳವಳಿ ನಡೆಸಲಾಗುವುದು ಎಂದು ಎಚ್ಚರಿಸಿದರು.ಜಿಲ್ಲಾಧಿಕಾರಿ ಎನ್.ಎಸ್.ಪ್ರಸನ್ನಕುಮಾರ್ ಅವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಅರ್ಪಿಸಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ಬಸವರಾಜ ನವಲಗುಂದ, ಮುಂಜು ಮುಧೋಳ, ಯಲ್ಲಪ್ಪ, ನಾರಾಯಣ, ಬಸವರಾಜ, ಎ.ಕೆ.ಬೆಲ್ಲದ, ಕರಿಬಸಪ್ಪ ಹಂಚಿನಾಳ ಭಾಗವಹಿಸಿದ್ದರು.
ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ
ಮುಂಡರಗಿ: ತಾಲ್ಲೂಕನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ತಾಲ್ಲೂಕು ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ನಂತರ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.
ಬೆಳಿಗ್ಗೆ ಕೋಟೆಭಾಗದ ಆಂಜನೇಯ ದೇವಸ್ಥಾನದಿಂದ ಹೊರಟ ಪ್ರತಿಭಟನಾಕಾರರು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪಟ್ಟಣದ ವಿವಿಧ ರಸ್ತೆಗಳಲ್ಲಿ ಸಂಚರಿಸಿ ನಂತರ ತಹಶೀಲ್ದಾರ್ ಕಚೇರಿಗೆ ಆಗಮಿಸಿದರು. ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ದೇವಪ್ಪ ಇಟಗಿ ಮಾತನಾಡಿ, ‘ಮುಂಡರಗಿ ತಾಲ್ಲೂಕು ಸತತವಾಗಿ ಬರಗಾಲಕ್ಕೆ ಈಡಾಗುತ್ತಿದೆ. ಆದರೆ ಮುಂಡರಗಿಯನ್ನು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕುಗಳನ್ನು ಬರಗಾಲ ಪೀಡಿತವೆಂದು ಘೋಷಿಸುವ ಮೂಲಕ ರಾಜ್ಯ ಸರ್ಕಾರ ತಾಲ್ಲೂಕಿನ ರೈತರಿಗೆ ತೀವ್ರ ಅನ್ಯಾಯ ಎಸಗಿದೆ’ ಎಂದು ದೂರಿದರು.
ಪುರಸಭೆ ಸದಸ್ಯ ಶಂಕರಗೌಡ ಪಾಟೀಲ ಮಾತನಾಡಿ, ’ತಾಲ್ಲೂಕು ಬರಗಾಲಕ್ಕೆ ಈಡಾಗಿ ರೈತರು ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಕಷ್ಟಗಳನ್ನು ನಿವಾರಿಸುವುದನ್ನು ಬಿಟ್ಟು, ಸ್ಥಳೀಯ ಶಾಸಕರು ವಿದೇಶಿ ಪ್ರವಾಸಕ್ಕೆ ತೆರಳಿ ಇಲ್ಲಯ ಜನತೆಯನ್ನು ಮರೆತಿದ್ದಾರೆ. ತಾಲ್ಲೂಕನ್ನು ಬರಗಾಲ ಪೀಡಿತವೆಂದು ಘೋಷಿಸಿ ತಕ್ಷಣ ಎಲ್ಲ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ರೈತರಿಗೆ 2011–12ರ ಬೆಳೆ ವಿಮೆ ನೀಡಬೇಕು. ಕಾಲು ಬೇನೆ ಬಾಯಿ ಬೇನೆಗಳಿಂದ ಸಾವಿಗೀಡಾದ ಜಾನುವಾರುಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. ಬಿದಾಯಿ ಯೋಜನೆಯನ್ನು ಎಲ್ಲ ವರ್ಗದವರಿಗೂ ವಿಸ್ತರಿಸಬೇಕು. ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪುರಸಭೆ ಮಾಜಿ ಉಪಾಧ್ಯಕ್ಷ ಶಿವನಗೌಡ್ರ ಗೌಡ್ರ, ಬಿ.ಎಸ್.ಶಶಿಮಠ ಮೊದಲಾದವರು ಮಾತನಾಡಿ ರಾಜ್ಯ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು. ಪುರಸಭೆ ಸದಸ್ಯರಾದ ಸುರೇಶ ಮಾಳೆಕೊಪ್ಪ, ಶಂಕರಗೌಡ ಪಾಟೀಲ, ಬಿಜೆಪಿ ಮುಖಂಡರಾದ ಬಸವರಾಜ ಬಿಳಿಮಗ್ಗದ, ಶಿವು ನಾಡಗೌಡರ, ಮಂಜುನಾಥ ಇಟಗಿ, ಫಕ್ಕಿರೇಶ ಬಳಿಗಾರ, ದೇವರಾಜ ಕಲಕೇರಿ, ಇತರರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.