ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

24X7 ಸೇವೆಗೆ ವೈದ್ಯರು ಸಜ್ಜಾಗಿ: ಸಚಿವ ಸಿ.ಸಿ.ಪಾಟೀಲ ಮನವಿ

Last Updated 15 ಮಾರ್ಚ್ 2020, 14:05 IST
ಅಕ್ಷರ ಗಾತ್ರ

ವಿಜಯಪುರ: ‘ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜಿಲ್ಲೆಯ ವೈದ್ಯರು ಸಮಯದ ಪರಿವೆ ಇಲ್ಲದೆ ಮುಂದಿನ 8ರಿಂದ 10 ದಿನ 24X7 ಸೇವೆಗೆ ಸಜ್ಜಾಗಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಕೊರೊನಾ ವೈರಸ್‌ ನಿಯಂತ್ರಣ ಮತ್ತು ಮುಂಜಾಗ್ರತೆ ಕ್ರಮಗಳ ಕುರಿತ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಕೆಟ್ಟ ಸುದ್ದಿಗಳಿಗೆ ವೇಗ ಜಾಸ್ತಿ. ಒಳ್ಳೆಯ ಸುದ್ದಿಗಳಿಗೆ ವೇಗ ಕಡಿಮೆ. ಆದ್ದರಿಂದ, ಕೊರೊನಾ ವೈರಸ್ ಬಗ್ಗೆ ಸುಳ್ಳು ಸುದ್ದಿ ಹರಡುವವರ ವಿರುದ್ಧ ಐಪಿಸಿ ಸೆಕ್ಷನ್‌ 188ರ ಪ್ರಕಾರ ಕಾನೂನು ಕ್ರಮ ಜರುಗಿಸಬೇಕು. ಕೊರೊನಾ ಬಗ್ಗೆ ಜಿಲ್ಲಾಧಿಕಾರಿ ಅವರನ್ನು ಹೊರತುಪಡಿಸಿ ಯಾರೂ ಮಾಧ್ಯಮಗಳಿಗೆ ಮಾಹಿತಿ ನೀಡುವಂತಿಲ್ಲ’ ಎಂದು ಹೇಳಿದರು.

‘ಹೋಟೆಲ್‌ಗಳಲ್ಲಿ ತಂಗುವ ಹೊರ ರಾಜ್ಯ, ಹೊರ ದೇಶಗಳ ಪ್ರವಾಸಿಗರು ಮತ್ತು ಪ್ರಯಾಣಿಕರ ಬಗ್ಗೆ ಹೋಟೆಲ್ ಮಾಲೀಕರು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಜಿಲ್ಲೆಯ ಅಧಿಕಾರಿಗಳು ರಜೆ ತೆಗೆದುಕೊಳ್ಳದೆ ಕೆಲಸ ಮಾಡಬೇಕು’ ಎಂದರು.

‘ಈ ಹಿಂದೆ ಯಾವತ್ತೂ ವಾರದ ಮಟ್ಟಿಗೆ ರಾಜ್ಯ ಸ್ತಬ್ಧವಾದ ನಿದರ್ಶನಗಳು ಇಲ್ಲ. ವ್ಯಾಪಾರ, ವಹಿವಾಟು ಬಂದ್ ಆಗುವುದರಿಂದ ಸಾಕಷ್ಟು ನಷ್ಟ ಉಂಟಾಗುತ್ತಿದೆ. ಆದಾಗ್ಯೂ, ರಾಜ್ಯದ ಜನರ ಆರೋಗ್ಯದ ದೃಷ್ಟಿಯಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ನಿರ್ಧಾರ ಕೈಗೊಂಡಿದ್ದಾರೆ’ ಎಂದು ತಿಳಿಸಿದರು.

‘ಸೂಕ್ಷ್ಮ ಮತ್ತು ವಿಷಮ ಸ್ಥಿತಿಯಲ್ಲಿ ವೈದ್ಯರು ಸೇವೆ ಸಲ್ಲಿಸುತ್ತಿರುವುದು ಅಭಿನಂದನೀಯ. ಜಿಲ್ಲಾಡಳಿತ ಕೂಡ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರುವುದು ಶ್ಲಾಘನೀಯ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದ ರೆಡ್ಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ ಎಲ್.ಅರಸಿದ್ಧಿ, ಉಪ ವಿಭಾಗಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT