ಬೆಂಗಳೂರು: ದೌರ್ಜನ್ಯ ತಡೆ ಕಾಯ್ದೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಖಂಡಿಸಿ ಬೆಂಗಳೂರು ವಿಶ್ವವಿದ್ಯಾಲಯ ಬಂದ್ಗೊಳಿಸಿ ಬುಧವಾರ ಪ್ರತಿಭಟನೆ ನಡೆಸಲಾಯಿತು.
ರಾಜ್ಯ ವಿಶ್ವವಿದ್ಯಾಲಯಗಳ ಶಿಕ್ಷಕರ ಪರಿಷತ್ ವತಿಯಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ವಿಶ್ವವಿದ್ಯಾಲಯಕ್ಕೆ ಬೆಳಿಗ್ಗೆ ಬಂದಿದ್ದ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು, ತರಗತಿ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಮುಖ್ಯ ಕಚೇರಿ ಎದುರು ಸೇರಿದ್ದ ಪ್ರತಿಭಟನಾಕಾರರು, ‘ತೀರ್ಪಿನ ಬಗ್ಗೆ ಎಲ್ಲ ಪಕ್ಷಗಳ ಮುಖಂಡರು ಎರಡು ದಿನದೊಳಗೆ ತಮ್ಮ ಪ್ರತಿಕ್ರಿಯೆ ನೀಡಬೇಕು. ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಬೇಕು’ ಎಂದರು.
ಪರಿಷತ್ ಅಧ್ಯಕ್ಷ ಪ್ರೊ. ಬಿ.ಸಿ. ಮೈಲಾರಪ್ಪ, ‘ಐದು ದಿನಗಳ ಕಾಲ ವಿಶ್ವವಿದ್ಯಾಲಯ ಬಂದ್ ಮಾಡಲಿದ್ದೇವೆ’ ಎಂದು ಹೇಳಿದರು.
ಸ್ಥಳಕ್ಕೆ ಬಂದ ಹಂಗಾಮಿ ಕುಲಪತಿ ಶಿವಕುಮಾರ್, ‘ಬಂದ್ ಮಾಡುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಲಿದೆ. ನಿಮ್ಮ ಮನವಿ ಸ್ವೀಕರಿಸುತ್ತೇವೆ. ಬಂದ್ ನಿರ್ಧಾರ ಕೈಬಿಡಿ’ ಎಂದು ಕೋರಿದರು. ಅದಕ್ಕೆ ಒಪ್ಪಿಗೆ ಸೂಚಿಸಿದ ಪರಿಷತ್ ಸದಸ್ಯರು, ಬಂದ್ ಅಂತ್ಯಗೊಳಿಸಿದರು.