ರಾಮನಗರ: ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳು ತಲುಪುವಂತೆ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಗಾಣಕಲ್ ನಟರಾಜು ಹೇಳಿದರು.
ಇಲ್ಲಿನ ಗುರುಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಸೋಮವಾರ ನಡೆದ ವಿಶ್ವ ಅಂಗವಿಕಲರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 19ಸಾವಿರಕ್ಕೂ ಹೆಚ್ಚು ಮಂದಿ ಅಂಗವಿಕಲರು ಇದ್ದಾರೆ. ಮೂರು ಅಥವಾ ಆರು ತಿಂಗಳಿಗೊಮ್ಮೆ ಇಲಾಖೆ ಅಧಿಕಾರಿಗಳು ಅವರ ಬಳಿ ತೆರಳಿ ಸರ್ಕಾರದ ಸೌಲಭ್ಯಗಳು ತಲುಪುತ್ತಿದೆಯೇ ಎಂದು ಮೇಲ್ವಿಚಾರಣೆ ನಡೆಸಬೇಕು, ಆ ಮೂಲಕ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ದೊರಕುವಂತೆ ಮಾಡಬೇಕು ಎಂದರು.
ಪ್ರತಿ ವರ್ಷದಂತೆ ಇಲಾಖೆಯಿಂದ ಅಂಗವಿಕಲರ ದಿನವನ್ನು ಆಚರಿಸುವ ಜೊತೆಗೆ ಇದರ ಜತೆಗೆ ಉಚಿತ ಆರೋಗ್ಯ ಶಿಬಿರ ಏರ್ಪಡಿಸಿದ್ದೇ ಆದಲ್ಲಿ ಎಲ್ಲರಿಗೂ ಆರೋಗ್ಯ ಕಾಳಜಿ ವಹಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು.
ಅಂಗವಿಕಲರು ಆರೋಗ್ಯ ಕಾರ್ಡ್ ಮಾಡಿಸಿಕೊಳ್ಳಲು ಸಾಕಷ್ಟು ಶ್ರಮ ಹಾಕಬೇಕಿದೆ. ಇಲಾಖೆ ಅಧಿಕಾರಿಗಳು ಇವರಿಗೆ ಆರೋಗ್ಯ ಕಾರ್ಡ್ ಮಾಡುವ ಶಿಬಿರ ಆಯೋಜಿಸಿದರೆ, ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೇಮಾವತಿ ಮಾತನಾಡಿ ಅಂಗವಿಕಲರ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅನೇಕ ಯೋಜನೆಗಳು ಜಾರಿಗೆ ತಂದಿದೆ. ಪ್ರತಿ ವರ್ಷ ಸಾಧನೆ ಮಾಡಿದ ಅನೇಕರನ್ನು ಸರ್ಕಾರ ಗೌರವಿಸುತ್ತದೆ ಎಂದರು.
ಜಿಲ್ಲೆಯ ಇಬ್ಬರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕ್ರೀಡೆಯಲ್ಲಿ ಸಾಧನೆ ಮಾಡಿದ ಜಯರಾಮಯ್ಯ ಅವರಿಗೆ ಕೇಂದ್ರ ಪ್ರಶಸ್ತಿ ದೊರಕಿದರೆ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡ ನಾಗೇಂದ್ರ ಅವರಿಗೆ ರಾಜ್ಯ ಪ್ರಶಸ್ತಿ ಲಭಿಸಿದೆ ಎಂದು ತಿಳಿಸಿದರು.
ಬಿಜಿಎಸ್ ಅಂಧರ ಶಾಲೆಯ ಮುಖ್ಯಶಿಕ್ಷಕ ಶಿವರಾಮು ಮಾತನಾಡಿ ನ್ಯೂನತೆಯನ್ನು ಮೆಟ್ಟಿನಿಂತ ಅನೇಕರು ಸಾಧನೆ ಮಾಡಿದ್ದಾರೆ. ಅದರಂತೆ ತಮ್ಮಲ್ಲಿನ ಸಾಮರ್ಥ್ಯವನ್ನು ಮನಗಂಡು ಸಾಧನೆ ಮಾಡಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಒಂಬತ್ತು ಜನ ದೃಷ್ಟಿ ನ್ಯೂನತೆ ಉಳ್ಳವರಿಗೆ ಟಾಕಿಂಗ್ ಲ್ಯಾಪ್ ಟಾಪ್ ವಿತರಣೆ ಮಾಡಲಾಯಿತು. ಬಿಜಿಎಸ್ ಅಂಧರ ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಉಪನಿರ್ದೇಶಕಿ ಗೀತಾ ಬಿ.ಪಾಟೀಲ್ ಇದ್ದರು. ಶಿಕ್ಷಕ ನಗೆಮಳೆರಾಜು ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.