ಹಾಸನ: ರಾಜ್ಯದಲ್ಲಿ ಮುಂಗಾರು ಹಾಗೂ ಪ್ರವಾಹ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಡಿಯೊ ಸಂವಾದದ ಮೂಲಕ ಅವಲೋಕನ ನಡೆಸಿದರು.
ಕರಾವಳಿ, ಮಲೆನಾಡು ಸೇರಿದಂತೆ 13 ಜಿಲ್ಲೆಗಳ ಅಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿ ಹಲವು ಸೂಚನೆಗಳನ್ನು ನೀಡಿದರು.
ಮಂಡ್ಯದಿಂದ ಸಂವಾದದಲ್ಲಿ ಪಾಲ್ಗೊಂಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಅರಕಲಗೂಡು ತಾಲ್ಲೂಕಿನಲ್ಲಿ ಹೊಗೆಸೊಪ್ಪು ಹಾಗೂ ಇತರ ಬೆಳೆಗಳು ಹಾನಿಯಾಗಿದ್ದು, ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು.
ಮಳೆ ಹಾನಿ ಸಮೀಕ್ಷೆ ನಡೆಸಿ ಪರಿಹಾರ ವಿತರಿಸುವಂತೆ ಎಂದು ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಆರ್ ಗಿರೀಶ್ ಮಾತನಾಡಿ, ಜಿಲ್ಲೆಯ ಸಕಲೇಶಪುರ, ಆಲೂರು, ಬೇಲೂರು ಹಾಗೂ ಅರಕಲಗೂಡು ತಾಲ್ಲೂಕಿನಲ್ಲಿ ಮಳೆ ಹೆಚ್ಚಾಗಿದೆ. 45 ಮನೆಗಳು ಹಾನಿಯಾಗಿದ್ದು ಮೂರು ಮನೆ ಸಂಪೂರ್ಣ ಕುಸಿದಿವೆ. ತಕ್ಷಣದ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಮಳೆ ಹೆಚ್ಚಿರುವ ಇರುವ ಕಡೆ ಶಾಲೆಗಳಿಗೆ ರಜೆ ನೀಡಿ. ಎಲ್ಲ ರೀತಿಯ ಮುಂಜಾಗ್ರತೆ ವಹಿಸಿ ಎಂದು ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಂತರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಪಾಲ್ಗೊಂಡಿದ್ದರು.
ಕಂಟ್ರೋಲ್ ರೂಂ ಸ್ಥಾಪನೆ: ಹಾಸನ ತಾಲ್ಲೂಕು ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಜೀವಹಾನಿ, ಜಾನುವಾರು, ಮನೆ, ಬೆಳೆ, ಮೂಲಸೌಕರ್ಯಗಳ ಹಾನಿಯ ಬಗ್ಗೆ ತಾಲ್ಲೂಕು ಕಚೇರಿಯಲ್ಲಿ ಸ್ಥಾಪಿಸಲಾಗಿರುವ ಕಂಟ್ರೋಲ್ ರೂಂ (ದೂ.ಸಂ. 08172-268395) ಗೆ ಮಾಹಿತಿ ಒದಗಿಸುವಂತೆ ಹಾಸನ ತಹಶೀಲ್ದಾರ್ ತಿಳಿಸಿದ್ದಾರೆ.