ಹಾಸನ : ಅನಾರೋಗ್ಯದಿಂದ ಬಳಲುತ್ತಿದ್ದ ತಾಲ್ಲೂಕಿನ ದುದ್ದ ಗ್ರಾಮದ ಯೋಧ ದೇವರಾಜ್ (24) ಬುಧವಾರ ಮೃತಪಟ್ಟಿದ್ದಾರೆ.
ಎರಡು ವರ್ಷದ ಹಿಂದೆ ಭಾರತೀಯ ಸೇನೆ ಸೇರಿ, ಜಮ್ಮು ಕಾಶ್ಮೀರದ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಬಹು ಅಂಗಾಂಗ ವೈಫಲ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಗಡಿ ಕಾಯುವ ಕೆಲಸದಿಂದ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಪುಣೆಯ ಆರ್ಮಿ ಕ್ಯಾಂಪ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಗುರುವಾರ ಸ್ವಗ್ರಾಮಕ್ಕೆ ಪಾರ್ಥಿವ ಶರೀರ ತರಲಾಗುತ್ತಿದ್ದು, ಜಿಲ್ಲಾಡಳಿತ ವತಿಯಿಂದ ಗೌರವ ಸಲ್ಲಿಸಲು ವ್ಯವಸ್ಥೆ ಮಾಡಲಾಗಿದೆ. ಯೋಧನ ಗ್ರಾಮದಲ್ಲಿ ನೀರವ ಮೌನ ಆವರಿಸಿತ್ತು. ಕುಟುಂಬದ ಸದಸ್ಯರ ಆಕ್ರಂದನ ಮುಗಿಲು ಮಟ್ಟಿತ್ತು.
‘ದೇವರಾಜ್ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ದೆಹಲಿ ಅಧಿವೇಶನದ ನಂತರ ಅವರ ನಿವಾಸಕ್ಕೆ ಭೇಟಿ ನೀಡಲಾಗುವುದು’ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದ್ದಾರೆ.