ಹಾಸನ: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಶ್ರೇಯೋಭಿವೃದ್ಧಿಗೆ ಡಿ. ದೇವರಾಜ್ ಅರಸು ಅವರ ಕೊಡುಗೆ ಅಪಾರ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಹಾಗೂ ಡಿ. ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಡಿ.ದೇವರಾಜ್ ಅರಸು ಅವರ 105ನೇ ಜನ್ಮ ಜಯಂತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇವರಾಜ್ ಅರಸು ಅನೇಕ ಕ್ರಾಂತಿಕಾರಿ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಹಿಂದುಳಿದ ವರ್ಗಗಳ, ಕುಟುಂಬಗಳ ಸರ್ವತೋಮುಖ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅಂತಹ ಆದರ್ಶಗಳನ್ನು ಪಾಲಿಸುವ ಮೂಲಕ ಅವರ ಕನಸನ್ನು ನನಸು ಮಾಡಲು ಎಲ್ಲರೂ ಶ್ರಮಿಸಬೇಕು ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಬಿ.ಎ ಪರಮೇಶ್ ಮಾತನಾಡಿ, ಮಲ ಹೊರುವ ಪದ್ದತಿ, ಜೀತ ಪದ್ದತಿಗಳಂತಹ ಸಾಮಾಜಿಕ ಅನಿಷ್ಠಗಳನ್ನು ನಿರ್ಮೂಲನೆ ಮಾಡುವಲ್ಲಿ ಡಿ. ದೇವರಾಜ್ ಅರಸು ಅವರ ಪಾತ್ರ ಅಪಾರವಾಗಿದೆ. ಉಳುವವನೆ ಭೂಮಿಯ ಒಡೆಯ ಎಂಬ ಭೂ ಸುಧಾರಣೆ ಕಾಯಿದೆ ಜಾರಿಗೆ ತರುವ ಮೂಲಕ ದೇವರಾಜ್ ಅರಸು ರಾಷ್ಟ್ರಕ್ಕೆ ಮಾದರಿಯಾಗಿದ್ದಾರೆ ಎಂದು ಹೇಳಿದರು.
ಸ್ವಾತಂತ್ರ್ಯ ಹೊರಾಟಗಾರ ಎಚ್.ಎಂ. ಶಿವಣ್ಣ ಮಾತನಾಡಿ ಡಿ. ದೇವರಾಜ್ ಅರಸು ಅವರು ರಾಜ್ಯಕ್ಕೆ ಕರ್ನಾಟಕ ಎಂದು ಮರು ನಾಮಕರಣ ಮಾಡಿದ್ದಾರೆ. ಸಾಮಾಜಿಕ ನ್ಯಾಯಕ್ಕಾಗಿ ಹಾಗೂ ಕೆಳಮಟ್ಟದ ಜನಸಮುದಾಯದ ಪ್ರಗತಿಗೆ ಶ್ರಮಿಸಿ ಅವರಿಗೆ ಧ್ವನಿಯಾಗಿ, ಉಸಿರಾಗಿ ಬದುಕಿದವರು. ಅವರನ್ನು ಪ್ರತಿಯೊಬ್ಬರು ಸದಾ ಸ್ಮರಿಸಬೇಕು ಎಂದರು.
ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಓದಿ ಎಸ್.ಎಸ್.ಎಲ್.ಸಿಯಲ್ಲಿ 620 ಅಂಕ ಗಳಿಸಿರುವ ಅಂಜಲಿ ಕೆ.ವಿ ಎಂಬ ವಿದ್ಯಾರ್ಥಿಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಬಿ.ಎ. ಪರಮೇಶ್ ಗೌರವಿಸಿದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಜಿ.ಪಂ ಉಪ ಕಾರ್ಯದರ್ಶಿ ಚಂದ್ರಶೇಖರ್, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಅಧಿಕಾರಿ ಹರ್ಷ, ಡಿ. ದೇವರಾಜು ಅರಸು ಅಭಿವೃದ್ಧಿ ನಿಗಮದ ಅಧಿಕಾರಿ ಕೃಷ್ಣಕುಮಾರ್, ಜಿಲ್ಲಾ ಸಣ್ಣ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಮಹಂತಪ್ಪ ಹಾಗೂ ಇತರರು ಇದ್ದರು.