ಹಾಸನ: ಡಾ.ಬಿ.ಆರ್.ಅಂಬೇಡ್ಕರ್ ಅವರ ಜೀವನಾಗಾಥೆ ಸಾರುವ ‘ಮಹಾನಾಯಕ’ ಧಾರಾವಾಹಿಯ ಬ್ಯಾನರ್ ಮತ್ತು ಫ್ಲೆಕ್ಸ್ಗಳನ್ನು ಹಾಕಲು ಅಡ್ಡಿಪಡಿಸುವ ಮತ್ತು ವಿರೂಪಗೊಳಿಸುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ (ಡಿಎಚ್ಎಸ್) ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಆವರಣದ ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಾಯಿತು.
ಅಂಬೇಡ್ಕರ್ ಅವರು ಜೀವನದಲ್ಲಿ ಅನುಭವಿಸಿದ ಅವಮಾನ, ಅಸ್ಪೃಶ್ಯತೆ, ಸಂಕಷ್ಟ, ಹೋರಾಟ ಮತ್ತು ಸಾಧನೆಯನ್ನು ತಿಳಿದುಕೊಳ್ಳಲು ಉತ್ತಮ ಅವಕಾಶ ದೊರಕಿದೆ. ಆದರೆ, ಕಿಡಿಗೇಡಿಗಳು ಧಾರವಾಹಿ ಪ್ರಸಾರ ಮಾಡುವುದನ್ನು ನಿಲ್ಲಿಸುವಂತೆ ಜೀ ಕನ್ನಡ ವಾಹಿನಿ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಅವರಿಗೆ ಬೆದರಿಕೆ ಕರೆ ಮಾಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಜಾತಿ, ಅಸ್ಪೃಶ್ಯತೆ ಜೀವಂತವಾಗಿದೆ. ಜಿಲ್ಲೆಯ ಆಲೂರು ತಾಲ್ಲೂಕಿನ ಬೆಳ್ಳಾವಾರ, ಚಿಕ್ಕಕಣಗಾಲು ಗ್ರಾಮಗಳಲ್ಲಿ ಫ್ಲೆಕ್ಸ್, ಬ್ಯಾನರ್ ವಿರೂಪಗೊಳಿಸಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ. ಹಾಸನ ತಾಲ್ಲೂಕಿನ ತೇಜೂರಿನಲ್ಲಿ ಫ್ಲೆಕ್ಸ್ ಹಾಕುವುದಕ್ಕೆ ಅಡ್ಡಿಪಡಿಸಲಾಗಿದೆ. ಇಂತಹ ಕಿಡಿಗೇಡಿ ಕೃತ್ಯಗಳು ಹಲವು ಕಡೆ ನಡೆಯುತ್ತಿದ್ದು, ಈ ಕಾರಣಕ್ಕೆ ಪರಿಶಿಷ್ಟ ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ ಎಂದು ಆರೋಪಿಸಿದರು.
ಈ ಸಂಬಂಧ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಸಂಚಾಲಕ ಎಂ.ಜಿ ಪೃಥ್ವಿ, ತಾಲ್ಲೂಕು ಸಂಚಾಲಕ ಎಂ.ಎನ್. ಮಧುಸೂದನ್, ರಾಜು ಸಿಗರನಹಳ್ಳಿ, ಎಚ್.ಟಿ. ಮೀನಾಕ್ಷಿ, ಶಶಿ, ಅರವಿಂದ್ ಇದ್ದರು.