ಹಾಸನ: ಬೆಳೆ ಸಮೀಕ್ಷೆ ದಾಖಲಾತಿ ಆರಂಭ
ಹಾಸನ: 2021-22ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಜಿಲ್ಲೆಯಾದ್ಯಂತ ಆರಂಭವಾಗಿದ್ದು, ಕಳೆದ ಸಾಲಿನಂತೆಯೇ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.
ಬೆಳೆ ವಿವರ ದಾಖಲಿಸಲು ‘ಮುಂಗಾರು ರೈತರ ಬೆಳೆ ಸಮೀಕ್ಷೆ 2021-22’ ಎಂಬ ಹೆಸರಿನ ಮೊಬೈಲ್ ಆ್ಯಪ್ ಅನ್ನು ಗೂಗಲ್ ಪ್ಲೇ-ಸ್ಟೋರ್ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಮೊಬೈಲ್ ಆ್ಯಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದೆ.
ಗೂಗಲ್ ಪ್ಲೇ-ಸ್ಟೋರ್ನಲ್ಲಿ ‘ಖಾರೀಫ್ ಸೀಸನ್ ಫಾರ್ಮರ್ ಕ್ರಾಪ್ ಸರ್ವ 2021- 22’ ಎಂದು ಹುಡುಕಿ ಅಥವಾ ಕ್ಯೂಆರ್ ಕೋಟ್ ಸ್ಕ್ಯಾನ್ ಮಾಡಿಕೊಂಡು ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಬಹುದು.
ರೈತರ ಆಧಾರ್ ಕಾರ್ಡ್ನ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿಕೊಂಡು ಆಧಾರ್ ವಿವರ ಮತ್ತು ಮೊಬೈಲ್ ನಂಬರ್ ನಮೂದಿಸಿ ಸಕ್ರಿಯಗೊಳಿಸಲು ಒಟಿಪಿ ನಮೂದಿಸಬೇಕು.
ಮೊಬೈಲ್ ಆ್ಯಪ್ನಲ್ಲಿ ಮೊದಲು ಮಾಸ್ಟರ್ ವಿವರಗಳನ್ನು ಡೌನ್ಲೋಡ್ ಮಾಡಿಕೊಳ್ಳಬೇಕು. ನಂತರ ತಮ್ಮ ಜಮೀನಿನ ಸರ್ವೇ ನಂಬರ್ಗಳನ್ನು ಆ್ಯಪ್ಗೆ ಸೇರಿಸಿಕೊಳ್ಳಬೇಕು. ರೈತರು ತಾವು ಬೆಳೆದ ಪ್ರತಿ ಬೆಳೆಯ ವಿವರಗಳೊಂದಿಗೆ ಪ್ರತಿ ಬೆಳೆಯ 2 ಫೋಟೋಗಳನ್ನು ತೆಗೆದು ಅಪ್ಲೋಡ್ ಮಾಡಬೇಕಾಗಿದೆ.
ಹೀಗೆ ಸಂಗ್ರಹಿಸಲಾದ ಬೆಳೆ ಸಮೀಕ್ಷೆ ಮಾಹಿತಿಯನ್ನು ಎನ್ಡಿಆರ್ಎಫ್, ಎಸ್ಡಿಆರ್ಎಫ್ ಅಡಿ ಪ್ರವಾಹ ಮತ್ತು ಬರಗಾಲ ಸಂದರ್ಭದಲ್ಲಿ ನೀಡುವ ನಷ್ಟ ಪರಿಹಾರ ವಿತರಿಸಲು, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು, ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು, ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡಲು ಬಳಸಲಾಗುತ್ತದೆ.
‘ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ಸರ್ಕಾರ ನಿಗದಿಪಡಿಸಿದ ಸಮಯದೊಳಗೆ ಅಪ್ಲೋಡ್ ಮಾಡಬೇಕು. ಮಾಹಿತಿಗೆ ಗ್ರಾಮದ ಖಾಸಗಿ ನಿವಾಸಿಗಳು, ಕೃಷಿ, ಕಂದಾಯ, ರೇಷ್ಮೆ, ತೋಟಗಾರಿಕೆ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು’ ಎಂದು ಜಂಟಿ ಕೃಷಿ ನಿರ್ದೇಶಕ ಕೆ.ಎಚ್.ರವಿ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.