ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಲೈಂಗಿಕ ದೌರ್ಜನ್ಯ ವಿಡಿಯೊ ಪ್ರಕರಣದಲ್ಲಿ ಪೆನ್ಡ್ರೈವ್ ಹಂಚಿಕೆ ಸಂಬಂಧ ಹೇಳಿಕೆ ನೀಡಿದ್ದ ವಕೀಲ, ಬಿಜೆಪಿ ಮುಖಂಡ ಜಿ. ದೇವರಾಜೇಗೌಡರಿಗೆ ಸಂಕಷ್ಟ ಎದುರಾಗಿದೆ. ಅವರ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಹಾಗೂ ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಹಿರಿಯೂರಿನಲ್ಲಿ ದೇವರಾಜೇಗೌಡರನ್ನು ವಶಕ್ಕೆ ಪಡೆದಿರುವ ಪೊಲೀಸರು, ಹೊಳೆನರಸೀಪುರಕ್ಕೆ ಕರೆತಂದಿದ್ದಾರೆ.
ಹೊಳೆನರಸೀಪುರದ ಇನ್ಸ್ಪೆಕ್ಟರ್ ಕಚೇರಿಯಲ್ಲಿ ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಬಂಧಿಸುವ ಸಾಧ್ಯತೆಗಳು ದಟ್ಟವಾಗಿವೆ. ಎಸ್ಪಿ ಮೊಹಮ್ಮದ್ ಸುಜೀತಾ, ಎಎಸ್ಪಿ ವೆಂಕಟೇಶ್ ನಾಯ್ಡು, ಡಿವೈಎಸ್ಪಿ ಅಶೋಕ್ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಸುರೇಶ್ ಕುಮಾರ್ ವಿಚಾರಣೆ ನಡೆಸುತ್ತಿದ್ದಾರೆ.
ನಿವೇಶನ ಮಾರಿಸಿಕೊಡುವ ಸಂಬಂಧ ಸಂಪರ್ಕಿಸಿದ್ದ ದೇವರಾಜೇಗೌಡರು, ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಏ.1 ರಂದು ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಾತಿನಿಂದನೆಗೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣ ದಾಖಲಾಗಿದೆ. ಈ ಮಧ್ಯೆ ಮಾರ್ಚ್ನಲ್ಲಿ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಕೂಡ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಹಾಸನ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಒಟ್ಟಿಗೆ ಎಲ್ಲ ಪ್ರಕರಣಗಳ ವಿಚಾರಣೆ ನಡೆಸಲಾಗುತ್ತಿದೆ.
ಬಿಗಿ ಬಂದೋಬಸ್ತ್: ಹೊಳೆನರಸೀಪುರ ಇನ್ಸ್ಪೆಕ್ಟರ್ ಕಚೇರಿಯಲ್ಲಿ ದೇವರಾಜೇಗೌಡ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಚೇರಿ ಮುಂದೆ ಜಮಾಯಿಸಿದ್ದ ನೂರಾರು ಜನರನ್ನು ಚದುರಿಸಿದ ಪೊಲೀಸರು, ಸಮೀಪದ ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ.
ಕಚೇರಿ ಆವರಣದಿಂದ ಆಚೆ ಕಳಿಸಿದ ನಂತರ ಇನ್ಸ್ಪೆಕ್ಟರ್ ಕಚೇರಿ ಇರುವ ಅಂಗಡಿಗಳ ಮುಂದೆ ಜನರು ಗುಂಪುಗೂಡ ತೊಡಗಿದರು. ಹೀಗಾಗಿ ಅಲ್ಲಿಂದಲೂ ಜನರನ್ನು ಕಳುಹಿಸಿದ ಪೊಲೀಸರು, ಅಂಗಡಿಗಳನ್ನು ಬಂದ್ ಮಾಡಿಸಿದರು.
ಮುಂಜಾಗ್ರತಾ ಕ್ರಮವಾಗಿ ನಗರ ಠಾಣೆ ಎದುರು ಕೆಎಸ್ಆರ್ಪಿ ತುಕಡಿ ನಿಯೋಜಿಸಲಾಗಿದೆ.