ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ ದೊರಕಿದೆ. ಯಾವುದೇಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸುತ್ತೇನೆ. ಹಾಸನ ಜಿಲ್ಲೆ ಅಥವಾ ಇತರೆ ಯಾವುದೇ ಜಿಲ್ಲೆ ಉಸ್ತುವಾರಿ ನೀಡಿದರೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತೇನೆ. ಖಾತೆ ಹಂಚಿಕೆ ವಿಷಯವಾಗಿ ಮಾತುಕತೆ ನಡೆಯುತ್ತಿದ್ದು, ನಿರ್ದಿಷ್ಟ ಖಾತೆಗೆ ಪಟ್ಟು ಹಿಡಿದಿಲ್ಲ ಎಂದು ಸ್ಪಷ್ಟಪಡಿಸಿದರು.
ಬಿ.ವೈ.ವಿಜಯೇಂದ್ರ ಅವರಿಗೆ ಪಕ್ಷದಲ್ಲಿ ಸ್ಥಾನ ಮಾನ ನೀಡುವ ವಿಚಾರವಾಗಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಇದು ಪಕ್ಷದ ಆಂತರಿಕ ವಿಚಾರ ಆಗಿರುವುದರಿಂದ ಹಿರಿಯರು ತೀರ್ಮಾನ ಕೈಗೊಳ್ಳಲಿದ್ದಾರೆ.ಯಡಿಯೂರಪ್ಪ ಅವರು ಪಕ್ಷದ ಕಚೇರಿಗೆ ಭೇಟಿ ನೀಡಿ, ಎರಡು ತಾಸು ಕುಳಿತು ಚರ್ಚೆ ನಡೆಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಪ್ರವಾಸ ಮಾಡಲಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮುಂದುವರಿಯುತ್ತೇವೆ ಎಂದರು.