ಆಲೂರು: ಎತ್ತಿನಹೊಳೆ ಯೋಜನೆ ಕಾಮಗಾರಿಯಲ್ಲಿ ಭಾರಿ ಗಾತ್ರದ ಸಿಡಿಮದ್ದುಗಳನ್ನು ಸಿಡಿಸುತ್ತಿರುವುದರಿಂದ ಮನೆಗಳು ಬಿರುಕು ಬಿಟ್ಟು ಕುಸಿಯುವ ಹಂತದಲ್ಲಿವೆ. ಕೂಡಲೇ ಕಾಮಗಾರಿ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಕಾಮತಿ, ಜಿ.ಜಿ. ಕೊಪ್ಪಲು, ಲಕ್ಷ್ಮೀಪುರ ಮತ್ತು ಸುತ್ತಲಿನ ಗ್ರಾಮಸ್ಥರು ಗ್ರಾಮಸ್ಥರು, ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ನಟರಾಜ್ ನಾಕಲಗೂಡು ಮಾತನಾಡಿ, ‘ಎತ್ತಿನಹೊಳೆ ಯೋಜನೆ ಕಾಮಗಾರಿಗೆ ರಾತ್ರಿ ವೇಳೆ ಭಾರಿ ಗಾತ್ರದ ಸಿಡಿಮದ್ದನ್ನು ಬಳಸಲಾಗುತ್ತಿದೆ. ಇದರಿಂದ ಮನೆಗಳ ಗೋಡೆಗಳು ಬಿರುಕು ಬಿಡುತ್ತಿವೆ. ಭಾರಿ ಸದ್ದಾಗುವುದರಿಂದ ಗರ್ಭಿಣಿ, ಬಾಣಂತಿಯರು, ಹೃದಯ ಸಂಬಂಧಿ ಕಾಯಿಲೆಯವರು, ವೃದ್ಧರು, ಮಕ್ಕಳು ಭಯದಿಂದ ಬದುಕು ಸಾಗಿಸಬೇಕಾಗಿದೆ. ಈ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದು ದೂರಿದರು.
‘ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಸಾಕಷ್ಟು ರೈತರು ತಮ್ಮ ಜಮೀನು ಕಳೆದುಕೊಂಡಿದ್ದಾರೆ. ಇದೀಗ ಮನೆಗಳನ್ನು ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಸಿಡಿಮದ್ದಿನ ಸ್ಫೋಟಕ್ಕೆ ಮನೆಗಳು, ಶಾಲೆಗಳ ಗೋಡೆಗಳು ಬಿರುಕು ಬಿಟ್ಟಿವೆ. ತಕ್ಷಣ ಸಂಬಂಧಿಸಿದ ಅಧಿಕಾರಿಗಳು ಸ್ಥಳ ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.