ಹಾಸನ: ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿ ರೈತ, ದಲಿತ, ಕಾರ್ಮಿಕ ಸಂಘಟನೆ ಸದಸ್ಯರು ಶನಿವಾರ ಮಂಗಳೂರು–ಬೆಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ರಾಜ್ಯ ರೈತ ಸಂಘ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ್ ಬಣ) ಜಿಲ್ಲಾಧ್ಯಕ್ಷ ಬಾಬು ನೇತೃತ್ವದಲ್ಲಿ ಸುಮಾರು ನೂರಕ್ಕೂ ಹೆಚ್ಚು ಜನರು ಜಮಾವಣೆಗೊಂಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿದರು.
ಸುಮಾರು ಒಂದು ತಾಸು ಹೆದ್ದಾರಿ ತಡೆಯಿಂದ ರಸ್ತೆಯ ಎರಡೂ ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಬಳಿಕ ಬೂವನಹಳ್ಳಿ ಮಾರ್ಗವಾಗಿ ವಾಹನ ಸಂಚಾರಕ್ಕೆ ಪೊಲೀಸರು ವ್ಯವಸ್ಥೆ ಮಾಡಿದರು.