ಹಾಸನ: ‘ಅಖಂಡ ಭಾರತದ ಸಂಸ್ಕೃತಿ ಯಲ್ಲಿ ಹೆಣ್ಣು ಮಕ್ಕಳಿಗೆ ಧೈರ್ಯ ಮತ್ತು ಸ್ಥೈರ್ಯ ತುಂಬಿ ಬ್ರಿಟಿಷರ ವಿರುದ್ಧ ಧ್ವನಿ ಎತ್ತಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚನ್ನಮ್ಮ’ ಎಂದು ಶಾಸಕ ಪ್ರೀತಂ ಜೆ. ಗೌಡ ಹೇಳಿದರು.
ನಗರದ ಕನ್ನಡ ಸಾಹಿತ್ಯ ಪರಿಷತ್ತು ಸಭಾಂಗಣದ ಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತಾಲ್ಲೂಕು ಆಡಳಿತ ಆಶ್ರಯದಲ್ಲಿ ಏರ್ಪಡಿಸಿದ್ದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಹಿಳೆಯರು ಕೇವಲ ಕುಟುಂಬ ನಿರ್ವಹಣೆಗೆ ಮಾತ್ರ ಸೀಮಿತವಲ್ಲ. ಬ್ರಿಟಿಷರಿಗೆ ನೀಡುತ್ತಿದ್ದ ಕಪ್ಪ ಕಾಣಿಕೆ ವಿರುದ್ಧ ಹೋರಾಡಿ ರೈತ ಸಮುದಾಯದಲ್ಲಿ ಜಾಗೃತಿ ಮೂಡಿಸಿದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ ಎಂದು ನುಡಿದರು.
ತಣ್ಣೀರುಹಳ್ಳ ಮಠದ ಪೀಠಾಧ್ಯಕ್ಷ ವಿಜಯ ಕುಮಾರ್ ಸ್ವಾಮೀಜಿ ಮಾತನಾಡಿ, ‘ಸ್ವಾತಂತ್ರ್ಯದ ಕಿಡಿ ಹೊತ್ತಿಸಿ, ಸ್ವಾತಂತ್ರ, ಸ್ವಾಭಿಮಾನ ಸಹಕಾರ ಮೂರ್ತಿಯಾಗಿ ಚನ್ನಮ್ಮ ತನ್ನ ಪುಟ್ಟ ರಾಜ್ಯದ ರಕ್ಷಣೆಗೆ ಬ್ರಿಟಿಷರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ’ ಎಂದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಬಿ.ಎ. ಪರಮೇಶ್ ಮಾತನಾಡಿ, ‘ಚಿಕ್ಕ ವಯಸ್ಸಿನಲ್ಲಿ ಧೈರ್ಯಶಾಲಿಯಾಗಿ ಬೆಳೆದು ಬಿಲ್ವಿದ್ಯೆಯಲ್ಲಿ ಪರಿಣತಿ ಹೊಂದಿದ್ದರು. ಚನ್ನಮ್ಮಳ ಧೈರ್ಯ ಸಾಧನೆಗಳು ಮತ್ತು ಆಡಳಿತ ವಿಧಾನ ಎಲ್ಲರಿಗೂ ಆದರ್ಶ ಪ್ರಾಯ. ಅವರ ತತ್ವಾದರ್ಶಗಳನ್ನು ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು’ ಎಂದು ಅವರು ಹೇಳಿದರು.
ಉಪವಿಭಾಗಾಧಿಕಾರಿ ಬಿ.ಎ. ಜಗದೀಶ್ ಮಾತನಾಡಿ, ‘ಇತಿಹಾಸವನ್ನು ಉದಾಹರಣೆಯಾಗಿ ಇಟ್ಟುಕೊಂಡು
ದೇಶದ ಒಳಿತಿಗೆ ಶ್ರಮಿಸಬೇಕಾಗಿರುವುದು ಎಲ್ಲರ ಕರ್ತವ್ಯ. ಎಲ್ಲಿಯವರೆಗೂ ಸಜ್ಜನರು ದೇಶ ಆಳುವುದಿಲ್ಲವೋ ಅಲ್ಲಿಯವರೆಗೂ ದೇಶ ಮುಂದುವರೆಯುವುದಿಲ್ಲ. ಯುವ ಪೀಳಿಗೆಯನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವಲ್ಲಿ ಎಲ್ಲರೂ ಜವಾಬ್ದಾರಿ ವಹಿಸಬೇಕು’ ಎಂದರು.
ವಚನಕಾರರ ಆದರ್ಶಗಳನ್ನು ಯುವ ಜನತೆ ಜೀವನದಲ್ಲಿ ಅಳವಡಿಸಿಕೊಂಡರೆ ಉತ್ತಮ ಜೀವನ ನಡೆಸಲು
ಸಾಧ್ಯವಾಗುತ್ತದೆ. ದೇಶದ ಸ್ವಾತಂತ್ರಕ್ಕಾಗಿ ಹಲವಾರು ಮಹನೀಯರು ಪ್ರಾಣ ತ್ಯಾಗ ಮಾಡಿದ್ದಾರೆ ಎಂದರು.
ಹೊಳೆನರಸೀಪುರ ಮಹಿಳಾ ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕಿ ಭಾರತಿ ದೇವಿ ಅವರು ಚನ್ನಮ್ಮ ಆಡಳಿತ ಕುರಿತು ವಿಶೇಷ ಉಪನ್ಯಾಸ ನೀಡಿದರು.
ವಾಣಿ ಮತ್ತು ತಂಡದವರಿಂದ ಗೀತ ಗಾಯನ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು
ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಡಿ.ಸುದರ್ಶನ್, ತಹಶೀಲ್ದಾರ್ ನಟೇಶ್, ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ಮಹಾಂತಪ್ಪ, ವೀರಶೈವ ಲಿಂಗಾಯತ ಸಂಘದ ಉಪಾಧ್ಯಕ್ಷ ದೊಡ್ಡವೀರೇಗೌಡ, ಹಾಸನ ತಾಲ್ಲೂಕು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಬಸವ ಕೇಂದ್ರದ ಅಧ್ಯಕ್ಷ ಬಸವರಾಜ್, ಸ್ವಾತಂತ್ರ ಹೋರಾಟಗಾರ ಎಚ್.ಎಂ.ಶಿವಣ್ಣ, ಕಲಾವಿದ ಗ್ಯಾರಂಟಿ ರಾಮಣ್ಣ ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.