ಹಳ್ಳಿಗೆ ನಡೆಯಿರಿ ಮಕ್ಕಳ ತಜ್ಞರೆ: ಆರ್.ಅಶೋಕ

ಹಾಸನ: ಕೋವಿಡ್ ಸಂಭಾವ್ಯ ಮೂರನೇ ಅಲೆ ಮಕ್ಕಳನ್ನು ಹೆಚ್ಚು ಬಾಧಿಸುವ ಬಗ್ಗೆ ತಜ್ಞರು ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ‘ಹಳ್ಳಿಗೆ ನಡೆಯಿರಿ ಮಕ್ಕಳ ತಜ್ಞರೆ’ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.
ಪ್ರತಿ ತಾಲ್ಲೂಕಿನಲ್ಲಿ ಅಂದಾಜು 150ಕ್ಕೂ ಹೆಚ್ಚು ಅಪೌಷ್ಟಿಕ ಮಕ್ಕಳು ಇರಬಹುದು. ಮಕ್ಕಳ ತಜ್ಞರು, ಶುಶ್ರೂಷಕರ ತಂಡ ಹಳ್ಳಿಗಳಿಗೆ ಭೇಟಿ ನೀಡಿ, ತೀವ್ರ ಅಪೌಷ್ಟಿಕ, ಸಾಧಾರಣ ಅಪೌಷ್ಟಿಕತೆ ಹೊಂದಿರುವ ಹಾಗೂ ಅಂಗವಿಕಲ ಮಕ್ಕಳನ್ನು ಗುರುತಿಸಿ ಆರೋಗ್ಯ ತಪಾಸಣೆಗೆ ಒಳಪಡಿಸಲಿದೆ. ಅಗತ್ಯವಿದ್ದರೆ ಜಿಲ್ಲಾಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುವುದು. ಪ್ರತಿ ತಾಲ್ಲೂಕಿಗೆ ಎರಡು ವಾಹನಗಳನ್ನು ನಿಯೋಜಿಸಲಾಗುವುದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರ ಜತೆಯೂ ಚರ್ಚಿಸಲಾಗುವುದು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಂದಾಯ ಇಲಾಖೆಯ ಎಸ್ಡಿಆರ್ಎಫ್ ಅನುದಾನ ಅಡಿ ಅಪೌಷ್ಟಿಕ ಮಕ್ಕಳಿಗೆ ಅರ್ಧ ಕೆ.ಜಿ. ಹಾಲಿನ ಪುಡಿ, 200 ಗ್ರಾಂ ಬಾದಾಮಿ, ಬಿಸ್ಕೆಟ್, ಮಲ್ಟಿ ವಿಟಮಿನ್ ಮಾತ್ರೆ, ಸಿರಪ್ ಸೋಪ್ ಒಳಗೊಂಡ ಆಹಾರ ಕಿಟ್ಗಳನ್ನು ನೀಡಿ, ರೋಗ ನಿರೋಧಕ ಶಕ್ತಿ ಹೆಚ್ಚಿಸಲಾಗುವುದು. ಅಲ್ಲದೇ ಕೋವಿಡ್ನಿಂದ ಮೃತಪಟ್ಟ ಮನೆಗಳಿಗೆ ಸಿಬ್ಬಂದಿ ಭೇಟಿ ನೀಡಿ, ಮೃತ ವ್ಯಕ್ತಿ ಸೋಂಕು ತಗಲುವ ಮುನ್ನ ಯಾವ ಕಾಯಿಲೆಗಳಿಂದ ಬಳಲುತ್ತಿದ್ದರು ಎಂಬ ಮಾಹಿತಿ ಸಂಗ್ರಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಕೋವಿಡ್ ಎರಡನೇ ಅಲೆ ನಿಯಂತ್ರಣಕ್ಕೆ ಈಗಾಗಲೇ ರಚಿಸಿದ್ದ ಟಾಸ್ಕ್ ಫೋರ್ಸ್ ರದ್ದು ಪಡಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳನ್ನು ಒಳಗೊಂಡಂತೆ ಹೊಸ ಟಾಸ್ಕ್ಫೋರ್ಸ್ ರಚಿಸುವಂತೆ ಮಾಡಿದ ಮನವಿಗೆ ಸಿ.ಎಂ ಸ್ಪಂದಿಸಿದ್ದಾರೆ ಎಂದರು.
ಹೇಮಾವತಿ ಜಲಾಶಯ ಯೋಜನೆ (ಎಚ್ಆರ್ಪಿ) ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ಸಾವಿರಾರು ಎಕರೆ ಸರ್ಕಾರಿ ಭೂಮಿ ಕಬಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಸಿ, ಎ.ಸಿ, ತಹಶೀಲ್ದಾರ್, ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಯಾರೇ ಭಾಗಿಯಾಗಿದ್ದರೂ ಕ್ರಮ ಕೈಗೊಳ್ಳಲಾಗುವುದು. ಕಾನೂನಿನಿಂದ ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅಕ್ರಮವಾಗಿ ಮಂಜೂರಾಗಿರುವ ಭೂಮಿಯನ್ನು ಮತ್ತೆ ಸರ್ಕಾರದ ವಶಕ್ಕೆ ಪಡೆದುಕೊಳ್ಳಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.