ಬೇಲೂರು: ’ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ. ಸುರೇಶ್ ತಮ್ಮ ಬೆಂಬಲಿಗರೊಂದಿಗೆ ಅರೇಹಳ್ಳಿ ಪೊಲೀಸ್ ಠಾಣೆಗೆ ಹೋಗಿ ಅಲ್ಲಿನ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದು ಖಂಡನೀಯ’ ಎಂದು ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ತೋ.ಚ. ಅನಂತ ಸುಬ್ಬರಾಯ ಹೇಳಿದರು.
’ಕಳೆದ ಭಾನುವಾರ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ. ಸುರೇಶ್ ತಮ್ಮ ಬೆಂಬಲಿಗ ರೌಡಿ ಶೀಟರ್ಗಳು ಮತ್ತು ಇತರರೊಂದಿಗೆ ಅರೇಹಳ್ಳಿ ಪೊಲೀಸ್ ಠಾಣೆಗೆ ಹೋಗಿ ಅಲ್ಲಿನ ಸಿಬ್ಬಂದಿ ಜೊತೆಗೆ ಸೌಜನ್ಯದಿಂದ ವರ್ತಿಸದೆ ಅಸಭ್ಯತನ ತೋರಿಸಿದ್ದಾರೆ. ಅವರ ಬೆಂಬಲಿಗರ ಸಮಸ್ಯೆಗಳು ಇದ್ದಾರೆ ಸೌಜನ್ಯದಿಂದ ಕೇಳಬಹುದಿತ್ತು. ಅಧಿಕಾರಗಳ ಬಗ್ಗೆ ಅಸಮಾಧಾನವಿದ್ದರೆ ಮೇಲಾಧಿಕಾರಿಗೆ ದೂರು ಸಲ್ಲಿಸಬಹುದಾಗಿತ್ತು. ಅದನ್ನು ಬಿಟ್ಟು ಈ ರೀತಿ ನಡೆದುಕೊಂಡಿರುವುದು ಸಭ್ಯತನವಲ್ಲ’ ಎಂದು ಟೀಕಿಸಿದರು.
’ಮಹಿಳಾ ಸಿಬ್ಬಂದಿ ಜೊತೆಗೆ ಅನುಚಿತವಾಗಿ ವರ್ತಿಸಿರುವುದು. ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು ಈ ಎಲ್ಲಾ ಘಟನೆಗಳನ್ನು ಜೆಡಿಎಸ್ ಪಕ್ಷ ಖಂಡಿಸುತ್ತದೆ. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ. ಸುರೇಶ್ ಅವರ ಬೆಂಬಲಿಗರು ತಾಲ್ಲೂಕಿನ ವಿವಿಧ ಸರ್ಕಾರಿ ಕಚೇರಿಗಳಲ್ಲೂ ಹಸ್ತಕ್ಷೇಪ ಮಾಡುತಿದ್ದಾರೆ ಎಂಬ ಆರೋಪ ಕೇಳಿ ಬರುತಿದ್ದೆ. ಇದು ಹೀಗೆ ಮುಂದುವರೆದರೆ ಅವರ ವಿರುದ್ಧ ಜೆಡಿಎಸ್ ಪಕ್ಷದಿಂದ ಹೋರಾಟನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.
ಸುದ್ದಿಗೋಷ್ಟಿಯಲ್ಲಿ ಎಚ್ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎ. ನಾಗರಾಜ್, ಎಪಿಎಂಸಿ ಅಧ್ಯಕ್ಷ ಸಿ.ಎಚ್. ಮಹೇಶ್, ತಾಲ್ಲೂಕು ಪಂಚಾಯಿತಿ ಸದಸ್ಯ ಸೋಮಯ್ಯ ಇದ್ದರು.